ನವದೆಹಲಿ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಖಲೆ ಸಮೇತ ಬಿಡುಗಡೆ ಮಾಡಿ ಆರೋಪ ಮಾಡಿದ್ದರು. ಈ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು SIT ರಚನೆಗೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ.
ಹೌದು 2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ವಿಶೇಷ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಎಸ್ಐಟಿ ತನಿಖೆಗೆ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿದಾರರು ಚುನಾವಣಾ ಆಯೋಗಕ್ಕೆ ದೂರು ನೀಡಬೇಕೆಂದು ಸೂಚಿಸಿದೆ.
ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ ನ್ಯಾಯಪೀಠ, ಎಸ್ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಅರ್ಜಿದಾರರಿಗೆ ಕೋರ್ಟ್ ಸೂಚಿಸಿತು.
ಚುನಾವಣಾ ಆಯೋಗ ಯಾವಾಗ ಕ್ರಮ ಕೈಗೊಳ್ಳಬೇಕು ಎಂದು ಒಂದು ಗಡುವು ನಿಗದಿ ಮಾಡಬೇಕು ಎಂದೂ ಅರ್ಜಿದಾರರು ಸರ್ವೋಚ್ಚ ನ್ಯಾಯಪೀಠಕ್ಕೆ ಮನವಿಯನ್ನೂ ಮಾಡಿದರು. ಕೋರ್ಟ್ ಈ ಮನವಿಯನ್ನೂ ತಿರಸ್ಕರಿಸಿತು. ಅರ್ಜಿದಾರರ ವಕೀಲರ ವಾದ ಆಲಿಸಿದೆವು. ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಲಾಗಿದೆ. ಆದರೆ, ಅರ್ಜಿಯನ್ನು ಪುರಸ್ಕರಿಸದಿರಲು ನಿರ್ಧರಿಸಿದ್ದೇವೆ. ಚುನಾವಣಾ ಆಯೋಗದಲ್ಲಿ ಪ್ರಕರಣ ತೆಗೆದುಕೊಂಡು ಹೋಗಬೇಕೆಂದು ಅರ್ಜಿದಾರರಿಗೆ ಸಲಹೆ ನೀಡಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೊಯಮಾಲ್ಯ ಬಾಗಚಿ ಅವರಿದ್ದ ನ್ಯಾಯಪೀಠ ತಿಳಿಸಿತು.