ಬಳ್ಳಾರಿ : ಬರುವ ನವೆಂಬರ್ 04 ರಿಂದ 11 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಶುಕ್ರವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು. ವಿವಿಧ ಸಮಿತಿಗಳಲ್ಲಿನ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಸೇನಾ ನೇಮಕಾತಿಗೆ ಸಂಬAಧಿಸಿದAತೆ ಇದೊಂದು ವಿಶೇಷ ರ್ಯಾಲಿಯಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ನಮ್ಮ ಜಿಲ್ಲೆಯ ವಿದ್ಯಾರ್ಥಿ, ಯುವಜನರಿಗೆ ಸ್ಪೂರ್ತಿ ಸಿಗುವ ಹಾಗೆ ರ್ಯಾಲಿಯು ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳ ಸಹಕಾರ ಬೇಕಾಗಿದೆ. ಹಾಗಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹೆಚ್ಚು ಸಮನ್ವಯದಿಂದ ಕಾರ್ಯನಿರ್ವಹಣೆ ಮಾಡಬೇಕು ಎಂದು ನಿರ್ದೇಶನ ನೀಡಿದರು.ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ಭಾಗವಹಿಸುವ ನಿರೀಕ್ಷೆ ಇದ್ದು, ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡಲು ಜನಸಂದಣಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ(ಎಸ್ಒಪಿ) ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಸೇನಾ ನೇಮಕಾತಿ ಅಧಿಕಾರಿಗಳಿಗೆ ಸೂಚಿಸಿದರು.ರ್ಯಾಲಿಯಲ್ಲಿ ಮುಖ್ಯವಾಗಿ ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ಹೇಳಿದರು.ರ್ಯಾಲಿಯಲ್ಲಿ ವೇದಿಕೆ, ಆಸನ ವ್ಯವಸ್ಥೆ, ವಿದ್ಯುತ್ ದೀಪಗಳ ವ್ಯವಸ್ಥೆ, ಮೈದಾನದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಜನರೇಟರ್ ವ್ಯವಸ್ಥೆ, ಆಸನ, ಕುರ್ಚಿಗಳು, ಟೇಬಲ್ಗಳು, ಮೈಕ್ಸೆಟ್ ಮತ್ತು ಹಾಸಿಗೆ ಹಾಗೂ ತ್ಯಾಜ್ಯದ ತೊಟ್ಟಿಗಳ ವ್ಯವಸ್ಥೆ, ಬಿಎಸ್ಎನ್ಎಲ್ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಜೊತೆಗೆ ವೈಫೈ ಮತ್ತು ಟೆಲಿಫೋನ್, ಎಲ್ಎಎನ್ ಸಂಪರ್ಕ, ಫೈಬರ್ ಕೇಬಲ್ ಜೊತೆಗೆ ಟೆಕ್ನಿಕಲ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟ ಉಪಹಾರದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕ್ರೀಡಾಂಗಣದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆಯು ಶಿಸ್ತುಬದ್ಧವಾಗಿ ನಡೆಯುವಂತೆ ಈ ಕುರಿತು ಸಂಬAಧಿಸಿದ ಸಮಿತಿ ಪಾರದರ್ಶಕವಾಗಿ ನಿರ್ವಹಣೆ ಮಾಡಬೇಕು. ರ್ಯಾಲಿಯ ಕುರಿತು ವ್ಯಾಪಕ ಪ್ರಚಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಸೇನಾ ನೇಮಕಾತಿಯ ಅಧಿಕಾರಿಗಳಾದ ಕರ್ನಲ್ ವಿವೇಕ್ ಜಮಿಂದಾರ್, ಮೇಜರ್ ಕಪಿಲ್ ಕೆ. ಸೇರಿದಂತೆ ಬಿಎಸ್ಎನ್ಎಲ್, ಅಗ್ನಿಶಾಮಕ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.