ಶಿವಮೊಗ್ಗ: “ವೃಕ್ಷ ಮಾತೆ” ಸಾಲುಮರದ ತಿಮ್ಮಕ್ಕ ಅವರ ನಿಧನ ಮನಸ್ಸಿಗೆ ಆಘಾತ ತಂದಿದೆ. ಪರಿಸರ ಸಂರಕ್ಷಣೆಗೆ ತಮ್ಮ ಬದುಕನ್ನೇ ಸಮರ್ಪಿಸಿದ ತಿಮ್ಮಕ್ಕ ಅವರ ಸೇವೆ ಎಂದಿಗೂ ಮರೆಯಲಾಗದು. ಅವರು ನೆಟ್ಟ ಹಸಿರು ಗಿಡಗಳಂತೆ ಅವರ ನೆನಪುಗಳೂ ಸದಾ ಜೀವಂತವಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಧೈರ್ಯ ದೊರಕಲಿ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು ಎಂದಿದ್ದಾರೆ.
ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಅಂತ ಹೇಳಿದ್ದಾರೆ.
ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.








