ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಸುವರ್ಣ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದ್ದು, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಎಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್ ಆಗಿವೆ. ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.








