ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ.
ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು.
ನಿನ್ನೆ i20 ಕಾರ್ ನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಪಂಚಾಕ್ಷರಿ ಅವರಿಗೆ ಕಾರು ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ. ಪರಿಣಾಮ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.








