ಶಾಲೆಯಲ್ಲಿ 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೋಕ್ಸೊ ಹಾಗೂ ಬಾಲಗರ್ಭಿಣಿಯರು ಹಾಗೂ ಮಕ್ಕಳ ಸುರಕ್ಷತೆ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಎರಡನೆ ದರ್ಜೆಯ ಪ್ರಜೆಯಾಗಿ ನೋಡುತ್ತಾರೆ. ಹೆಣ್ಣು ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಹಿನ್ನೆಯಲ್ಲಿ ಪ್ರತಿ ಮಂಗಳವಾರ ಬೆ.11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಹಾಗೂ ಸಂಜೆ.07 ಗಂಟೆಗೆ “ಡಿಸ್ಕಸ್ ವಿತ್ ಡಿಸಿ” ಎಂಬ ಕಾರ್ಯಕ್ರಮದೊಂದಿಗೆ ವಿಡಿಯೋ ಸಂವಾದದ ಮೂಲಕ ಎಲ್ಲಾ ವಸತಿ ಶಾಲೆ ಮತ್ತು ವಸತಿ ನಿಲಯಗಳ ಮಕ್ಕಳಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಣ್ಣು ಮಕ್ಕಳ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿ, ಉದಾಸೀನ ಮಾಡದೆ, ತೀವ್ರತೆಯನ್ನು ಅರಿತು ಸುರಕ್ಷತೆಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು ಬೆಳಕಿಗೆ ಬರುವುದಿಲ್ಲ, ಎಂತಹ ಸಂದರ್ಭದಲ್ಲೂ ಕೂಡಾ ದೃತಿಗೆಡದೆ ಧೈರ್ಯವಾಗಿ ನಡೆದ ಘಟನೆಯ ಬಗ್ಗೆ ಮುಕ್ತವಾಗಿ ಮಕ್ಕಳು ಹೇಳುವಂತೆ ಪ್ರಜ್ಞಾವಂತರನ್ನಾಗಿ ಮಾಡಬೇಕು. ಜೊತೆಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಅವರಿಗೆ ತರಬೇತಿ ನೀಡುವುದರ ಮೂಲಕ ಸಜ್ಜುಗೊಳಿಸಬೇಕು ಎಂದರು.
ಹೆಣ್ಣು ಮಕ್ಕಳು ಯಾವುದೇ ತೊಂದರೆಗೆ ಸಿಲುಕಿದಾಗ ಅಂಜದೆ, ಸಂಕೋಚ ಪಡದೆ 1098 ಗೆ ಕರೆ ಮಾಡುವಂತೆ ಅವರಿಗೆ ಧೈರ್ಯ ತುಂಬಬೇಕು ಎಂದರಲ್ಲದೆ, ಶಾಲೆಯಲ್ಲಿ 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿಗಾ ವಹಿಸಬೇಕು ಎಂದು ತಿಳಿಸಿದರು.
ಪ್ರೀತಿ-ಪ್ರೇಮಕ್ಕೆ ಸಿಲುಕಿ ಹೆಣ್ಣು ಮಕ್ಕಳು ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಾರೆ. ಮೊದಲು ಓದು ಮುಖ್ಯ, ಸರಿದಾರಿಯಲ್ಲಿ ನಡೆದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರಲ್ಲದೆ, ಬಾಲಗರ್ಭಿಣಿಯರಾಗುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಉಂಟಾಗುವ ದುಷ್ಪರಿಣಾಮದ ಬಗ್ಗೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳು ಮಕ್ಕಳಿಗೆ ತಿಳುವಳಿಕೆ ಮೂಡಿಸಲು ಕ್ರಮವಹಿಸುವಂತೆ ತಿಳಿಸಿದರು.
ಪೋಕ್ಸೊ ಪ್ರಕರಣಗಳಲ್ಲಿ ಶಿಕ್ಷೆ ಆಗುವುದರ ಬಗ್ಗೆ ಮಕ್ಕಳಿಗೆ ಕಿರುಚಿತ್ರದ ಮೂಲಕ ತಿಳುವಳಿಕೆ ನೀಡಬೇಕು ಎಂದರಲ್ಲದೆ, ಆಕಾಶವಾಣಿ ಹಾಗೂ ಸ್ಥಳೀಯ ಕೇಬಲ್ ವಾಹಿನಿಗಳ ಮೂಲಕವೂ ಕೂಡಾ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಾಲ್ಯ ವಿವಾಹ, ಲೈಗಿಂಕ ದೌರ್ಜನ್ಯದಂತಹ ವಿಷಯಗಳ ಕುರಿತು ಕಡ್ಡಾಯವಾಗಿ ಎಲ್ಲಾ ಶಾಲೆಗಳಲ್ಲಿ ಪ್ರತಿಯೊಂದು ಮಗುವಿನಿಂದ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಪ್ರಬಂಧ ಬರೆಸಲು ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಗ್ರಾಮ ಸಭೆಗಳಲ್ಲೂ ಕೂಡಾ ಬಾಲ್ಯ ವಿವಾಹ, ಬಾಲ ಕಾರ್ಮಿಕತೆ, ಬಾಲ ಗರ್ಭಿಣಿ, ಪೋಕ್ಸೊ, ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಅರಿವು ಮೂಡಿಸಬೇಕು ಎಂದರಲ್ಲದೆ,
ತಾAಡ, ಗೊಲ್ಲರಹಟ್ಟಿ, ಕಾಫಿ ಎಸ್ಟೇಟ್, ವಲಸೆ ಕಾರ್ಮಿಕರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ದಾಖಲಾಗಿರುವ ಹಾಗೂ ಜನವರಿಯಿಂದ ಇದುವರೆಗೆ ದಾಖಲಾಗಿರುವ ಪೋಕ್ಸೊ ಪ್ರಕರಣಗಳ ಬಗ್ಗೆ ತಾಲ್ಲೂಕುವಾರು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪೋಕ್ಸೊ ಪ್ರಕರಣಗಳಲ್ಲಿ ಕೃತ್ಯ ಯಾರಿಂದ, ಎಲ್ಲಿ, ಯಾರ ಮೇಲೆ ನಡೆದಿದೆ ಎಂಬುದರ ಬಗ್ಗೆ ಹಾಗೂ ಆ ಮಕ್ಕಳ ಹಿನ್ನೆಲೆಯ ಬಗ್ಗೆ ಕೂಡಾ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.








