ಹಾಸನ : ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರವಾದ ಅಪಘಾತ ಸಂಭವಿಸಿ 9 ಜನ ಸಜೀವ ದಹನಗೊಂಡಿದ್ದಾರೆ. ಇನ್ನು ಈ ಒಂದು ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಘಟನೆ ವಿವರ
ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 11 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.








