ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಕೆಮಿಕಲ್ ಸೂಪರ್ ವೈಸರ್, ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ ಗಳ ನೇಮಕಕ್ಕೆ ಬೆಂಗಳೂರಿನ 17 ಕೇಂದ್ರಗಳಲ್ಲಿ ಡಿ.27ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು 8,622 ಮಂದಿ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ವಿವರಿಸಿದ್ದಾರೆ.
ಡಿ.28ರಂದು ಕೆಮಿಸ್ಟ್, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಬೆಂಗಳೂರಿನ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 10,136 ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದರು.
ಡಿ.28ರಂದು ಕನ್ನಡ ಭಾಷಾ ಪರೀಕ್ಷೆ ಕೂಡ ನಡೆಯಲಿದೆ ಎಂದು ಅವರು ಹೇಳಿದರು.








