ಉತ್ತರಕನ್ನಡ : ಶೈಕ್ಷಣಿಕ ಪ್ರವಾಸ ಹಿನ್ನಲೆಯಲ್ಲಿ ದಾವಣಗೆರೆಯ ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಗೆ ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ ಇದ್ದಂತಹ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಮೂಲತಃ ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಬಸ್ ಪಲ್ಟಿಯಾಗಿದೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ವಿಭೂತಿ ಫಾಲ್ಸ್ಗೆ ಹೋಗುವಾಗ ಶಿರಸಿ ತಾಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ತಕ್ಷಣ ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಡಿಸೆಂಬರ್ 28 ರಂದು ದಾವಣಗೆರೆಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಅದರ ಭಾಗವಾಗಿ ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ತೆರಳಿ, ಅಲ್ಲಿಂದ ಯಾನ ಹಾಗೂ ವಿಭೂತಿ ಫಾಲ್ಸ್ಗೆ ತೆರಳಬೇಕಿತ್ತು. ಮಾರ್ಗಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಪಲ್ಟಿಯಾದ ರಭಸಕ್ಕೆ ಬಸ್ನ ಗಾಜು ಸಂಪೂರ್ಣ ಪುಡಿಯಾಗಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಬಸ್ಸಿನಲ್ಲಿ ಒಟ್ಟು 50 ಜನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅಲ್ಲದೇ ಇನ್ನೊಂದು ಟಿಟಿ ಮೂಲಕವೂ ವಿದ್ಯಾರ್ಥಿಗಳು ಪ್ರವಾಸ ಆಗಮಿಸಿದ್ದರು. ಬಸ್ ಪಲ್ಟಿ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








