ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಡ್ರಾಪ್ ನೀಡುವ ನೆಪದಲ್ಲಿ ಕಾಮುಕನಬ್ಬ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ತಾನು ಮಾಡಿದ್ದು ಪಾಪದ ಕೆಲಸ ಎಂದು ಪಶ್ಚಾಪತಾಪದಿಂದ ಸ್ನೇಹಿತನಿಗೆ ಕರೆ ಮಾಡಿ ವಿಷಯ ತಿಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಘಟನೆ ಹಿನ್ನೆಲೆ?
ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್ನಿಲ್ದಾಣದಲ್ಲಿ ನಿಂತಿದ್ದಳು. ಆ ವೇಳೆ ಅಲ್ಲಿಗೆ ಬಂದ ಬೈಕ್ ಸವಾರ ಗಣೇಶ್ ಅಪ್ರಾಪ್ತ ವಿದ್ಯಾರ್ಥಿನಿಗೆ ಡ್ರಾಪ್ ಕೊಡುವ ನೆಪದಲ್ಲಿ ಆಕೆಯನ್ನು ಬೈಕ್ ಮೇಲೆ ಹತ್ತಿಸಿಕೊಂಡಿದ್ದಾನೆ.
ನಂತರ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನಂತೆ. ನಂತರ ಭಯ ಭೀತನಾದ ಆರೋಪಿ ತನ್ನ ಸ್ನೇಹಿತನಿಗೆ ಕರೆ ಮಾಡಿ ಮಾಡಿದ ಪಾಪಕೃತ್ಯವನ್ನು ಹೇಳಿಕೊಂಡಿದ್ದಾನೆ. ಗಣೇಶ್ ಸ್ನೇಹಿತ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಆ ಬೆನ್ನಲ್ಲೇ ಪೊಲೀಸರು ನಿರ್ಜನ ಪ್ರದೇಶಕ್ಕೆ ಬಂದು ಹುಡುಕಾಡಿದ್ದಾರೆ. ಆರೋಪಿಯ ಮೊಬೈಲ್ ಟ್ರೇಸ್ ಮಾಡಲಾಗಿದ್ದು, ನಿರ್ಜನ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿ ಆರೋಪಿ ಹಾಗೂ ಸಂತ್ರಸ್ತೆಯನ್ನು ಪತ್ತೆಹಚ್ಚಲಾಗಿದೆ.
ಬಳಿಕ ವಿದ್ಯಾರ್ಥಿನಿಯನ್ನು ಸ್ಥಳೀಯ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ರವಾನಿಸಿದ್ದು, ಆರೋಪಿ ಗಣೇಶ್ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸಂತ್ರಸ್ತ ಬಾಲಕಿ ಮೊದಲೇ ತಂದೆ ಕಳೆದುಕೊಂಡಿದ್ದು, ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ಘಟನೆಯಿಂದ ಆಕೆ ಮತ್ತಷ್ಟು ಅಘಾತಕ್ಕೆ ಒಳಗಾಗಿದ್ದಾಳೆ ಎನ್ನಲಾಗಿದ್ದು, ಪೆರೇಸಂದ್ರ ಠಾಣೆಯ ಪೊಲೀಸರು ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.








