ಬೆಂಗಳೂರು: ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾವು ಎನ್ಡಿಎ ಮೈತ್ರಿಯಲ್ಲಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಉತ್ತಮ ಸರ್ಕಾರ ತರಬೇಕು ಎನ್ನುವುದು. ಇದು ನನ್ನ ವೈಯಕ್ತಿಕ ಉದ್ದೇಶ ಎಂದು ಎಂದರು.
ರಾಜ್ಯದಲ್ಲಿ ಈಗ ಆಡಳಿತ ಹೇಗೆ ನಡೆಯುತ್ತಿದೆ ಎಂದು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಒಳ್ಳೆಯ ಸರ್ಕಾರ ಬಂದು ಜನತೆ ನೆಮ್ಮದಿಯಿಂದ ಇರಬೇಕು. ಈ ನಿಟ್ಟಿನಲ್ಲಿ ನಾಡಿನ ಜನತೆ ನಾನು ಯಾವ ಸ್ಥಾನದಲ್ಲಿ ಇರಬೇಕು ಅಂತ ತೀರ್ಮಾನ ಮಾಡಿದರೆ ಅದರಂತೆ ನಡೆಯುತ್ತೇನೆ. ಈ ವಿಷಯ ನನ್ನ ಕೈಯಲ್ಲಿ ಇಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ ಅಂತ ಯಾರಾದರೂ ತಿಳಿದುಕೊಂಡಿದ್ದರೆ ತಪ್ಪು. ನಾನು ರಾಜ್ಯ ರಾಜಕಾರಣದಿಂದ ದೂರ ಸರಿಯಲ್ಲ. ರಾಜ್ಯದ ರಾಜಕಾರಣದಲ್ಲಿ ಇರುತ್ತೇನೆ. ಕೇಂದ್ರದಲ್ಲಿ ಪ್ರಧಾನಿಗಳು ಉತ್ತಮ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡುತ್ತೇನೆ. ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಶಿಡ್ಲಘಟ್ಟ ಪ್ರಕರಣ; ಮುಖ್ಯ ಕಾರ್ಯದರ್ಶಿ ಇನ್ನೂ ಸ್ಪಂದಿಸಿಲ್ಲ ಎಂದ ಹೆಚ್ಡಿಕೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಿರಂತರವಾಗಿ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಸರಿಯಲ್ಲ, ಶಿಡ್ಲಘಟ್ಟ ಪ್ರಕರಣದ ಬಗ್ಗೆ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿ ಅವರಿಗೆ ತಿಳಿಸಿದ್ದೇನೆ. ಈವರೆಗೆ ಅವರು ಈ ಬಗ್ಗೆ ಯಾವ ಕ್ರಮವನ್ನು ವಹಿಸಿಲ್ಲ. ಇವತ್ತು ಸಂಕ್ರಾಂತಿ ಹಬ್ಬವಿದೆ. ಹೀಗಾಗಿ ನಾನು ಮತ್ತೆ ಅವರನ್ನು ಕೇಳಲು ಹೋಗಿಲ್ಲ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡನಿಂದ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣ ನಿಜಕ್ಕೂ ಬೇಸರ ತರಿಸಿದೆ. ನಮ್ಮ ಪಕ್ಷ ಅಂತಲ್ಲ, ಯಾವುದೇ ಪಕ್ಷದ ಕಾರ್ಯಕರ್ತರು, ಮುಖಂಡರು ಅಧಿಕಾರಿಗಳ ಜತೆ ಅನುಚಿತವಾಗಿ ವರ್ತಿಸಬಾರದು. ಒಂದೆರಡು ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಿದರೆ ಅದು ಪಾಠವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಸಲಹೆ ಮಾಡಿದರು.
ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸುವ ಪ್ರವೃತ್ತಿ ಸರ್ಕಾರದಲ್ಲಿ ವ್ಯಾಪಕವಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅಧಿಕಾರದಲ್ಲಿರುವ ಮೇಲಿನವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರ ಸರಿ ಇಲ್ಲದೆ ಇಲ್ಲದಿದ್ದಾಗ ಇವೆಲ್ಲ ನಡೆಯುತ್ತವೆ. ಮೇಟಿ ಸರಿಯಾಗಿದ್ದರೆ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಕೇಂದ್ರ ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದರು.
ಅಧಿಕಾರಿಗಳು ಕೂಡ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಬಡ್ತಿ ಅಥವಾ ಪೋಸ್ಟಿಂಗ್ ಆಸೆಗೆ ಬಿದ್ದು ಕಾನೂನುಬಾಹಿರ ಕೆಲಸ ಮಾಡಿದರೆ ಪ್ರತಿಫಲ ಅನುಭವಿಸಬೇಕಾಗುತ್ತದೆ. ಇತ್ತೀಚೆಗೆ ಒಂದು ಪತ್ರಿಕೆಯ ಅಗ್ರಬರಹವನ್ನು ಓದಿದೆ. ‘ಕಳಪೆ ಕಾಮಗಾರಿ; ಆರು ಮಂದಿ ಹೊಣೆ’ ಎನ್ನುವ ವರದಿ ನೋಡಿದ ಮೇಲೆ ವಿಕಾಸಸೌಧ ನಿರ್ಮಾಣದಲ್ಲಿ ಎಂಜಿನಿಯರುಗಳು ನಡೆಸಿರುವ ಅಕ್ರಮ ನಡೆಸಿರುವುದು ಬಯಲಾಗಿದೆ. 8 ವರ್ಷಗಳ ನಂತರ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಅಂತ ಲೋಕಾಯುಕ್ತ ತೀರ್ಪು ಕೊಟ್ಟಿದೆ. ಹೀಗಾಗಿ ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಕೆಲಸ ಮಾಡಬಾರದು. ಸರ್ಕಾರದ ನಿಯಮಾವಳಿ ಉಲ್ಲಂಘನೆ ಆಗದಂತೆ ಆತ್ಮಸಾಕ್ಷಿಗಾಗಿ ಕೆಲಸ ಮಾಡಿ ಎಂದು ಕೇಂದ್ರ ಸಚಿವರು ಕಿವಿಮಾತು ಹೇಳಿದರು.
ಜನತೆಗೆ ಸಂಕ್ರಾಂತಿ ಶುಭ ಕೋರಿದ ಸಚಿವರು
ನಾಡಿನ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಂಕ್ರಾಂತಿ ಹಬ್ಬ ಕೃಷಿಕರ ಹಬ್ಬ. ಈ ಬಾರಿ ಕಾಲ ಕಾಲಕ್ಕೆ ಹವಾಮಾನದಲ್ಲಿ ವ್ಯತ್ಯಾಸ ಆಗದೆ ಪ್ರಕೃತಿಯೂ ಸಹಕಾರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸಂಕ್ರಾಂತಿ ಮಣ್ಣಿನ ಮಕ್ಕಳ ಸಂಭ್ರಮ. ಸುಗ್ಗಿ, ಸಮೃದ್ಧಿಯ ಪ್ರತೀಕ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ. ಎಳ್ಳು ಬೆಲ್ಲದಂತೆ ಎಲ್ಲರ ಮನೆ ಮನಗಳಲ್ಲಿ ಸುಖ ಸಂತೋಷ, ನೆಮ್ಮದಿ ನೆಲೆಸಲಿ ಹಾಗೂ ಇನ್ನೂ ಹೆಚ್ಚಿನ ಆಯುರಾರೋಗ್ಯ ಸಿಗುವಂತಾಗಲಿ ಎಂದು ಹಾರೈಸಿದರು.
ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್








