ಬೀದರ್ : ಶತಾಯುಷಿ, ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (102) ವಿಧಿವಶ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಗೋಪಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಆದೇಶ ಹೊರಡಿಸಿದ್ದಾರೆ.
ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಇಂದು ರಾತ್ರಿ ಅವರ ಆತ್ಮ ದೇಹವನ್ನು ತ್ಯಜಿಸಿತು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.
ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಹರಚರ ಗುರುಮೂರ್ತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರನ್ನು ನೋಡಿ, ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.








