ಬೆಳಗಾವಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪ್ರಕರಣದ 12 ಆರೋಪಿಗಳು ತಪ್ಪಿತಸ್ಥರು ಅಂತಾ ತೀರ್ಪು ಪ್ರಕಟವಾಗಿತ್ತು. ಇದೀಗ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 12 ಅಪರಾಧಿಗಳಿಗೆ 5 ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರತಿ ಶಿಕ್ಷೆಗು ಒಂದೊಂದು ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಲಾಗಿದ್ದು, ಐದು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಎಚ್.ಎಸ್ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ದೋಷಿಗಳಾದ ಬಸಪ್ಪ ನಾಯಕ, ರಾಜು ನಾಯಕ, ಕೆಂಪಣ್ಣ ನಾಯಕ, ಪಾರ್ವತಿ ನಾಯಕ, ಯಲ್ಲವ ನಾಯಕ, ಲಕ್ಕಪ್ಪ ನಾಯಕ, ಗಂಗವ್ವ, ಸಂಗೀತ ಹೆಗ್ಗನಾಯಕ, ಸಂತೋಷ್ ನಾಯಕ, ಶೋಭಾ ನಾಯಕ, ಲಕ್ಕವ್ವ ನಾಯಕ ಹಾಗೂ ಶಿವಪ್ಪ ವನ್ನೂರಿಗೆ 5 ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಹೊಸ ವಂಟಮೂರಿಯಲ್ಲಿ 2023 ಡಿಸೆಂಬರ್ 11 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಪ್ರೀತಿಸಿದ ಯುವತಿಯೊಂದಿಗೆ ಯುವಕ ಮನೆ ಬಿಟ್ಟು ಪರಾರಿ ಆಗಿದ್ದ ವಿಚಾರಕ್ಕೆ ಯುವತಿ ಕುಟುಂಬಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಯುವಕನ ಮನೆ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು. ಇದು ಇಡೀ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೊಂಡಿದ್ದ ಪೊಲೀಸರು ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಸೇರಿ 13 ಜನ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಎಸ್. ಮಂಜುನಾಥ ಅವರು 12 ಆರೋಪಿಗಳು ತಪ್ಪಿತಸ್ಥರೆಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.








