ಹುಬ್ಬಳ್ಳಿ : ನಾಯಕತ್ವ ಬದಲಾವಣೆ ಕುರಿತು ಒಂದೆಡೆ ನಮ್ಮ ತಂದೆಯೇ 5 ವರ್ಷ ಸಿಎಂ ಎಂದು ಯತೀಂದ್ರ ಹೇಳುತ್ತಿದ್ದರೆ, ಮತ್ತೊಂದು ಕಡೆ ಯತೀಂದ್ರನೇ ನಮ್ಮ ಹೈಕಮಾಂಡ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದರ ಮಧ್ಯ ರಾಜ್ಯದ ಬಜೆಟ್ ಮಂಡನೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಂಭವವಿದ್ದು, ಈ ಕುರಿತು ಶೀಘ್ರದಲ್ಲಿಯೇ ವರಿಷ್ಠರು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ಶೇ.50ರಷ್ಟು ಸಚಿವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು. ಆ ಸ್ಥಾನಗಳನ್ನು ಹೊಸಬರಿಗೆ ನೀಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದನೆ ದೊರೆಯುವ ವಿಶ್ವಾಸವಿದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿ ದ್ದೇನೆ. ಕಳೆದ 22 ವರ್ಷದಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ಸಚಿವ ಸ್ಥಾನದ ವಿಶ್ವಾಸವಿದೆ ಎಂದರು.








