ಧಾರವಾಡ: ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತ ಹೆಸ್ಕಾಂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್ಗಳಿವೆ. ಇದರಲ್ಲಿ 41 ಫೀಡರ್ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮತ್ತು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಹೀಗೆ ನಿಗದಿತ ಫೀಡರಗಳಿಂದ ವಿವಿಧ ಅವಧಿಯಲ್ಲಿ ಒಟ್ಟು 7 ತಾಸು ಕೃಷಿ ಚಟುವಟಿಕೆಗಳಿಗಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.
ಹಿಂಗಾರು ಗೋಧಿ, ಬತ್ತ, ಕಬ್ಬು ಬೆಳೆಗಳಿಗೆ ಹೆಚ್ಚು ನೀರಿನ ಅಗತ್ಯವಿದ್ದು, ರೈತರು ನೀರಾವರಿಗಾಗಿ ಕೊಳವೆಬಾವಿಗಳನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಕಲಘಟಗಿ, ಅಳ್ನಾವರ ಮತ್ತು ಜಿಲ್ಲೆಯ ಇತರ ಭಾಗಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ತಡ ರಾತ್ರಿ ವಿದ್ಯುತ್ ನೀಡುವದರಿಂದ ನೀರು ಹಾಯಿಸಲು ತೊಂದರೆಯಾಗುತ್ತಿದೆ ಎಂದು ರೈತರು ಕರೆ ಮಾಡಿ, ಸಮಸ್ಯೆ ಹೇಳುತ್ತಿದ್ದಾರೆ ಎಂದರು.
ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆಯನ್ನು ಶಿಫ್ಟ್ ಆಧಾರದಲ್ಲಿ ಮಾಡಿದರೂ ಪರವಾಗಿಲ್ಲ, ಆದರೆ ತೀರಾ ಮಧ್ಯರಾತ್ರಿ ವಿದ್ಯುತ್ ಪೂರೈಸಿದರೆ, ರಾತ್ರಿ ಹೊತ್ತಲ್ಲಿ ರೈತರಿಗೆ ತೊಂದರೆ ಆಗುತ್ತದೆ. ಇದನ್ನು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಚಿವರು ತಿಳಿಸಿದರು.
ಅತೀ ಹೆಚ್ಚು ಸಮಸ್ಯೆ ಉಂಟಾಗುತ್ತಿರುವ ತಬಕದಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರವನ್ನು ಉನ್ನತಿಕರಿಸುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲಾಧಿಕಾರಿಗಳು, ಹೆಸ್ಕಾಂ ಅಧಿಕಾರಿ, ಇಂಜನೀಯರಗಳೊಂದಿಗೆ ತಬಕದಹೊನ್ನಳ್ಳಿ ವಿದ್ಯುತ್ ಸ್ಟೇಶನ್ ಗೆ ಭೇಟಿ ನೀಡಿ, ಕಾಮಗಾರಿ ಪ್ರಗತಿ ಪರಿಶೀಲಿಸಲು ಸಚಿವರು ಸೂಚಿಸಿದರು.
ನಿಗದಿ ಮತ್ತು ಅರಳಿಕಟ್ಟಿ ಕ್ರಾಸ್, ಬಮ್ಮಿಗಟ್ಟಿ ಸೇರಿ ಮೂರು ಗ್ರಾಮಗಳಿಗೆ ಹೊಸದಾಗಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲು ಸರಕಾರದಿಂದ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಟೆಂಡರ್, ಗುತ್ತಿಗೆದಾರ ಸಮಸ್ಯೆಗಳಿಂದ ವಿಳಂಬವಾಗುತ್ತಿದೆ ಎಂದು ಹೇಳಿದ ಸಚಿವರು ಕೆಪಿಟಿಸಿಎಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ವ್ಹಿ. ರಾಮ್ ಪ್ರಸಾತ್ ಮನೋಹರ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣ ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ, ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ವಿತರಣೆ ಬಗ್ಗೆ ಸರಿಯಾದ ಕ್ರಮ ವಹಿಸಬೇಕು. ಕಾಮಗಾರಿಗಳನ್ನು ತೀವ್ರಗೊಳಿಸಿ, ಬೇಗ ಮುಗಿಸಬೇಕು. ರೈತರು ಟಿಸಿ ಬಯಸಿದಲ್ಲಿ ಬೇಗನೆ ಪೂರೈಸಬೇಕು. ಅಗತ್ಯಗಳಿಗೆ ಅನುಗುಣವಾಗಿ ಟಿಸಿಗಳ ಹೆಚ್ಚು ದಾಸ್ತಾನು ಹೊಂದಬೇಕು ಎಂದು ಅವರು ತಿಳಿಸಿದರು.
ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್. ಖಾದ್ರಿ, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವೇದಿಕೆಯಲ್ಲಿ ಇದ್ದರು.
ಸಭೆಯಲ್ಲಿ ಹೆಸ್ಕಾಂ ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಮುಖ್ಯ ಎಂಜಿನಿಯರ್ ದೀಪಕ ಕಾಮತ, ಅಧೀಕ್ಷಕ ಎಂಜಿನಿಯರ್ ಕೆ.ವಿ.ಪಾಗಿ, ಕೆಪಿಟಿಸಿಎಲ್ ಅಧೀಕ್ಷಕ ಅಭಿಯಂತರ ಶಿಲ್ಪಾ, ಕಾರ್ಯಪಾಲಕ ಅಭಿಯಂತರ ಎಂ.ಟಿ.ದೊಡಮನಿ, ರವೀಂದ್ರ ಗದಗಕರ, ಸಹಾಯಕ ಕಾರ್ಯಪಾಲಕ ಅಭಿಯಂತರ ಗುಲ್ಜಾರ ಅಹ್ಮದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ವಿ.ಎನ್. ಪಾಟೀಲ ಸೇರಿದಂತೆ ವಿವಿಧ ಎಂಜಿನಿಯರಗಳು, ಅಧಿಕಾರಿಗಳು ಭಾಗವಹಿಸಿದ್ದರು.
ವಿದ್ಯುತ್ ತಗುಲಿ ಸಾವಿಗಿಡಾಗಿದ್ದ ರೈತನ ಕುಟುಂಬಕ್ಕೆ ಪರಿಹಾರ: ಕಳೆದ 2023 ಜುಲೈ ತಿಂಗಳ ಮಳೆಗಾಲ ಅವಧಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವಿಗಿಡಾಗಿದ್ದ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಮೃತ ರೈತ ಮಾರುತಿ ಕೊನಪ್ಪನವರ ಅವರ ಪತ್ನಿ ಮಲ್ಲವ್ವ ಅವರಿಗೆ ಸಚಿವ ಸಂತೋಷ ಲಾಡ್ ಅವರು ಹೆಸ್ಕಾಂ ಪರವಾಗಿ ರೂ.5 ಲಕ್ಷದ ಪರಿಹಾರ ಚೆಕ್ ವಿತರಿಸಿದರು.
ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ








