ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡುಗಳಿಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗುರುತಿಸಲು ಒಂದು ವಾರದ ಗಡುವು ನಿಗದಿ ಮಾಡಿರುವ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡರು; ಅಂತಿಮ ಪಟ್ಟಿಯನ್ನು ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅಂತಿಮ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಜಿಬಿಎ ಐದು ವಿಭಾಗಗಳ ಅಧ್ಯಕ್ಷರು ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು; ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಎಲ್ಲಾ ವಾರ್ಡುಗಳಲ್ಲಿ ಅಭ್ಯರ್ಥಿಗಳನ್ನು ಅದಷ್ಟು ಬೇಗ ಗುರುತಿಸಬೇಕು. ಸಂಘಟನಾ ಶಕ್ತಿ ಹಾಗೂ ಗೆಲುವಿನ ಮಾನದಂಡ ಮುಖ್ಯ ಆಗಿರುತ್ತದೆ. ಈ ಬಗ್ಗೆ ವರಿಷ್ಠರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕು. ಅದುವೇ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಸಂಕಲ್ಪ ಆಗಿದೆ. ಮೈತ್ರಿಯನ್ನು ಗಮನದಲ್ಲಿಟ್ಟುಕೊಂಡು, ಅದಕ್ಕೆ ಯಾವುದೇ ಚ್ಯುತಿ ಬರದಂತೆ ಎಲ್ಲರೂ ಅವರವರ ವಾರ್ಡುಗಳಲ್ಲಿ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.
ಅಲ್ಲದೆ, ಮತ್ತಗಟ್ಟೆ ಹಾಗೂ ವಾರ್ಡು ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಚುರುಕು ಮಾಡಬೇಕು. ಸಕ್ರಿಯ ಕಾರ್ಯಕರ್ತರನ್ನು ಮುನ್ನೆಲೆಗೆ ತರಬೇಕು. ಶೀಘ್ರದಲ್ಲಿ ಬೆಂಗಳೂರು ನಗರದಲ್ಲಿ ಬೃಹತ್ ಸಮಾವೇಶ ಮಾಡುವ ಚಿಂತನೆ ವರಿಷ್ಠರು ಹೊಂದಿದ್ದು, ಆ ಸಮಾವೇಶವನ್ನು ಯಶಸ್ವಿಗೊಳಿಸಲು ಪರಿಯೊಬ್ಬರು ಶ್ರಮಿಸಬೇಕು ಎಂದು ಅವರು ಕೋರಿದರು.
ಜಿಬಿಎ ಐದು ವಿಭಾಗಗಳ ಅಧ್ಯಕ್ಷರು ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಪರಸ್ಪರ ಅನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೋಮವಾರ ನಡೆದ ಸಭೆಯಲ್ಲಿ ರಾಜ್ಯಾಧ್ಯಕರು ತಾಕೀತು ಮಾಡಿದ್ದಾರೆ. ಒಮ್ಮತ, ಒಗ್ಗಟಿನಲ್ಲಿ ಬಲವಿದೆ ಎನ್ನುವುದನ್ನು ಮರೆಯಬಾರದು. ಬೆಂಗಳೂರು ನಗರದ ಅಭಿವೃದ್ಧಿಗೆ ದೇವೇಗೌಡರು, ಕುಮಾರಸ್ವಾಮಿ ಅವರ ಕೊಡುಗೆ ಬಹಳಷ್ಟಿದೆ. ಜನತೆಗೆ ಈ ಎಲ್ಲಾ ಮಾಹಿತಿ ಕೊಡಬೇಕು. ಪಕ್ಷದ ಸಾಧನೆಗಳನ್ನು ವಿನಮ್ರವಾಗಿ ಜನತೆಯ ಗಮನಕ್ಕೆ ತನ್ನಿ ಎಂದು ಅವರು ಹೇಳಿದರು.
ಸಭೆಯಲ್ಲಿ ಬೆಂಗಳೂರು ಉತ್ತರ ನಗರ ಜಿಲ್ಲೆಯ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಇ. ಕೃಷ್ಣಪ್ಪ, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಪೂರ್ವ ನಗರ ಜಿಲ್ಲೆಯ ಅಧ್ಯಕ್ಷ ನಟರಾಜ್ ಗಂಗಾಧರ್, ಗ್ರೇಟರ್ ಬೆಂಗಳೂರು ಮಹಿಳಾ ಅಧ್ಯಕ್ಷೆ ಶೈಲಾ ಸಂತೋಜಿ ರಾವ್ ಸೇರಿ ಅನೇಕ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.
ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ
‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು








