ಧಾರವಾಡ : ಹುಬ್ಬಳ್ಳಿ -ಧಾರವಾಡದ ಪೊಲೀಸ್ ಠಾಣೆಯ ವ್ಯಾಪ್ತಿಯ ಒಂದು ವಿಚಾರಣೆಗೆ ಹೆದರಿ ರೈತನೊಬ್ಬ ತನ್ನ ಹೊಲದಲ್ಲಿಯೇ ನೇಣು ಬಿಗಿದುಕೊಂಡಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಉಮಚಗಿ ಗ್ರಾಮದ ನಿವಾಸಿ ನಿಂಗಪ್ಪ ಕೋಟೆಪ್ಪ ಅಂಗಡಿ (48) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ನಿಂಗಪ್ಪನ ಮೇಲೆ ಗ್ರಾಮೀಣ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರನ್ವಯ ನಿಂಗಪ್ಪನಿಗೆ ವಿಚಾರಣೆಗೆ ಬರುವಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇಸ್ಪೆಕ್ಟರ್ ಮುರುಘಶ ಚನ್ನಣ್ಣವರ ಅವರು ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ದೂರವಾಣಿ ಕರೆ ಮಾಡಿದ್ದರು. ಪೊಲೀಸರ ವಿಚಾರಣೆಗೆ ಗಾಬರಿಗೊಂಡು ಹಾಗೂ ಮನನೊಂದು ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.








