ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 23) ಮಧ್ಯಾಹ್ನ 2 ಗಂಟೆಗೆ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜೆಟ್ ಅಧಿವೇಶನದ ನಡುವೆಯೇ ನಡೆಯಲಿರುವ ಈ ಭಾಷಣದಲ್ಲಿ, ಯುದ್ಧ ಪೀಡಿತ ಪ್ರದೇಶದಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ದೇಶದ ಆರ್ಥಿಕತೆಯ ಮೇಲೆ ಆಗಲಿರುವ ಪರಿಣಾಮಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಲಿದ್ದಾರೆ.
ಭಾನುವಾರವಷ್ಟೇ ಪ್ರಧಾನಿಯವರು ಉನ್ನತ ಮಟ್ಟದ ‘ಕ್ಯಾಬಿನೆಟ್ ಸಮಿತಿ’ (CCS) ಸಭೆ ನಡೆಸಿ ಪರಿಸ್ಥಿತಿಯನ್ನು ಪರಾಮರ್ಶಿಸಿದ್ದರು.ಇಸ್ರೇಲ್ ಮತ್ತು ಇರಾನ್ ನಡುವೆ ನೇರ ಯುದ್ಧ ಆರಂಭವಾಗಿರುವ ಹಿನ್ನೆಲೆಯಲ್ಲಿ ಭಾರತವು ಯಾರ ಪರ ನಿಲ್ಲಲಿದೆ ಅಥವಾ ತಟಸ್ಥ ನೀತಿ ಅನುಸರಿಸಲಿದೆಯೇ ಎಂಬ ಕುರಿತು ಪ್ರಧಾನಿ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಮತ್ತು ರಸಗೊಬ್ಬರ ಆಮದಿನಲ್ಲಿ ಉಂಟಾಗಬಹುದಾದ ವ್ಯತ್ಯಯವನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಪರ್ಯಾಯ ಕ್ರಮಗಳ ಬಗ್ಗೆ ಮೋದಿ ವಿವರಿಸಲಿದ್ದಾರೆ.ಅಬುಧಾಬಿಯಲ್ಲಿ ಇತ್ತೀಚೆಗೆ ಭಾರತೀಯ ಪ್ರಜೆಯೊಬ್ಬರು ಗಾಯಗೊಂಡಿರುವ ಘಟನೆ ಮತ್ತು ಇರಾನ್ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಯೋಜನೆಗಳ ಬಗ್ಗೆ ಸದನಕ್ಕೆ ಮಾಹಿತಿ ನೀಡಲಾಗುವುದು.








