ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಅವಕಾಶ ನೀಡುವ ಮಹತ್ವದ ವಿಧೇಯಕಕ್ಕೆ ರಾಜ್ಯ ವಿಧಾನಪರಿಷತ್ನಲ್ಲಿ ಬುಧವಾರ ಅಂಗೀಕಾರ ದೊರೆತಿದೆ.
ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿದ್ದ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ಕ್ಕೆ ಈಗ ವಿಧಾನಪರಿಷತ್ನಲ್ಲೂ ಅನುಮೋದನೆ ಸಿಕ್ಕಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ವಿಧೇಯಕವನ್ನು ಸದನದಲ್ಲಿ ಮಂಡಿಸಿದರು. ಈ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದಿಂದ ಹೊರನಡೆಯುವ (ಸಭಾತ್ಯಾಗ) ಮೂಲಕ ತಮ್ಮ ಪ್ರತಿರೋಧ ದಾಖಲಿಸಿದರು.
ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಹಾಗೂ ಭೋಜೆಗೌಡ ಸೇರಿದಂತೆ ಹಲವು ನಾಯಕರು ವಿಧೇಯಕವನ್ನು ವಿರೋಧಿಸಿದರು. ವಿಪಕ್ಷಗಳ ಗೈರುಹಾಜರಿಯಲ್ಲೇ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಯಿತು.
ಇದೇ ಸಂದರ್ಭದಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ 2026’ಕ್ಕೂ ಅನುಮೋದನೆ ನೀಡಲಾಯಿತು. ಇದರ ಅನ್ವಯಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ವಿದ್ಯಾಲಯ ಮತ್ತು ಪಿಎಂ ಶ್ರೀ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಲಾಗುವುದು.








