ಮಂಡ್ಯ : ಕುಡಿಯುವ ನೀರಿಗೆ ನಗರ ಸೇರಿದಂತೆ ಕ್ಷೇತ್ರದಲ್ಲಿ ಎಲ್ಲಿಯೂ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ತಲೆದಂಡ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕುಡಿಯುವ ನೀರಿನ ಸಮಸ್ಯೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ತಾಲೂಕಿನ ಕೆಲವು ಗ್ರಾಮಗಳಲ್ಲಿ ಸಾಕಷ್ಟು ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿದ್ದು, ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಬೇಕೆಂದರು.
ಕೊಪ್ಪ, ಆತಗೂರು ಹಾಗೂ ಕಸಬಾ ಹೋಬಳಿಯ ಕೆಲವು ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಅಭಾವ ಕಂಡು ಬಂದಿದೆ. ಕೆಲ ಗ್ರಾಮಗಳ ಕೊಳವೆ ಬಾವಿಗಳಲ್ಲಿ ನೈಟ್ರೈಟ್, ಪ್ಲೋರೆಡ್ ಅಂಶ ಸೇರಿದಂತೆ ಕಲುಷಿತ ನೀರು ಬರುತ್ತಿದ್ದು, ಇದರಿಂದ ಜನರಿಗೆ ಅನಾರೋಗ್ಯದ ಸಮಸ್ಯೆ ಕಾಡುವ ಸಾಧ್ಯತೆ ಇದೆ ಹೀಗಾಗಿ ಮುಂದಾಗುವ ಅನಾಹುತಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು.
ಚೆಸ್ಕಾಂ ಸಹಾಯಕ ಅಭಿಯಂತರರು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಸಭೆಯಲ್ಲಿದ್ದ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಅವರಿಗೆ ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಗೆ ನೋಟಿಸ್ ನೀಡುವ ಜೊತೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಕುಡಿಯುವ ನೀರಿಗೆ ಸಮಸ್ಯೆ ಇರುವ ಗ್ರಾಮಗಳಲ್ಲಿ ರೈತರಿಂದ ಹಾಗೂ ಖಾಸಗಿ ವ್ಯಕ್ತಿಗಳ ಕೊಳವೆ ಬಾವಿಗಳಿಂದ ಸಂಪರ್ಕ ಪಡೆದು ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಪೂರೈಕೆ ಮಾಡಬೇಕು. ಈಗಾಗಲೇ ನೀರಿನ ಸಮಸ್ಯೆಯಾಗದಂತೆ ಅತ್ಯಗತ್ಯ ಇರುವ ಕಡೆಗಳಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ. ಹೆಚ್ಚುವರಿ ಕೊಳವೆಬಾವಿ ಅವಶ್ಯಕತೆ ಇದ್ದಲ್ಲಿ ಕೊರೆಸಲು ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ತಾಲೂಕಿನ ಹಲವು ಗ್ರಾಮಗಳಲ್ಲಿ ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಅಪೂರ್ಣವಾಗಿವೆ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಜೆಜೆಎಂ ಯೋಜನೆಯಡಿ ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಮೂರು ತಿಂಗಳಲ್ಲಿ ಕಾಮಗಾರಿಗಳು ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು.
ಚೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ
ಬೇಸಿಗೆ ಕಾಲವಾದರಿಂದ ಕುಡಿಯುವ ನೀರು ಸರಬರಾಜು ಮಾಡಲು ವಿದ್ಯುತ್ ಅತ್ಯವಶ್ಯಕವಾಗಿರುವುದರಿಂದ ವಿದ್ಯುತ್ ಪರಿವರ್ತಕ ಹಾಗೂ ಅಗತ್ಯ ಸಹಕಾರ ಪಿಡಿಓಗಳಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡುವ ಮೂಲಕ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಉದಯ್ ಹೇಳಿದರು.
ಮೇವಿಗೆ ಕೊರತೆ ಇಲ್ಲ
ಕ್ಷೇತ್ರದಲ್ಲಿ ಬೇಸಿಗೆಗೆ ಜಾನುವಾರಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಓ ರಾಮಲಿಂಗಯ್ಯ, ನಗರಸಭೆ ಪೌರಯುಕ್ತೆ ಎಸ್.ಎನ್.ರಾಧಿಕಾ, ಚೆಸ್ಕಾಂ ಇಇ ಶಿವಕುಮಾರ್, ಗ್ರಾಮೀಣ ಕುಡಿಯುವ ನೀರು ಇಲಾಖೆ ಎಇಇ ಮಧುಸೂದನ್, ಬಿಇಓ ಧನಂಜಯ, ಟಿಎಚ್ಓ ರವಿಶಂಕರ್, ಆರ್ಎಫ್ಓ ಗವಿಯಪ್ಪ, ಸಿಡಿಪಿಓ ಅರುಣ್ ಕುಮಾರ್, ಪಶು ಇಲಾಖೆ ಸಹಾಯಕ ನಿರ್ದೇಶಕ ಗೋವಿಂದ್ ಹಾಗೂ ಗ್ರಾಪಂ ಆಡಳಿತಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಅಧಿಕಾರಿಗಳು, ಪಿಡಿಓಗಳು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: 14 ಶಾಲಾ ಮಕ್ಕಳು ಸೇರಿದಂತೆ 6 ಮಂದಿಗೆ ಗಾಯ








