ಬೆಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳವರೆಗೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಮಳೆಯ ಸಮಯದಲ್ಲಿ ಗಾಳಿಯು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 14 ರಿಂದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.
ರಾಜಧಾನಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಮುಂದಿನ 5 ದಿನಗಳ ಕಾಲ ಗರಿಷ್ಠ ಉಷ್ಣಾಂಶ 35°C ನಿಂದ 36°C ಮತ್ತು ಕನಿಷ್ಠ ಉಷ್ಣಾಂಶ 22°C ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ಬೇಗೆಯ ನಡುವೆಯೇ ಮಳೆಯ ಸಿಂಚನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.








