ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) 47ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ದಶಕಗಳ ಕಾಲದ ಕನಸುಗಳಾದ ಅಯೋಧ್ಯಾ ರಾಮಮಂದಿರ ನಿರ್ಮಾಣ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಈಗ ಸರ್ಕಾರದ ಮುಂದಿನ ಗುರಿ ‘ಏಕರೂಪ ನಾಗರಿಕ ಸಂಹಿತೆ’ (UCC) ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಸ್ಪಷ್ಟಪಡಿಸಿದ್ದಾರೆ.
“ನಾವು ಹೇಳಿದ್ದನ್ನು ಮಾಡಿದ್ದೇವೆ. ದಶಕಗಳ ಕಾಲ ನೆನೆಗುದಿಗೆ ಬಿದ್ದಿದ್ದ ರಾಮಮಂದಿರದ ಕನಸು ನನಸಾಗಿದೆ. ಸಿಎಎ ಜಾರಿಯ ಮೂಲಕ ಅಲ್ಪಸಂಖ್ಯಾತ ನಿರಾಶ್ರಿತರಿಗೆ ನ್ಯಾಯ ಒದಗಿಸಲಾಗಿದೆ,” ಎಂದು ಮೋದಿ ಹೆಮ್ಮೆಯಿಂದ ನುಡಿದರು.
ದೇಶಾದ್ಯಂತ ಏಕರೂಪದ ಕಾನೂನು ವ್ಯವಸ್ಥೆ ತರುವ ಉದ್ದೇಶದ ‘ಏಕರೂಪ ನಾಗರಿಕ ಸಂಹಿತೆ’ (UCC) ಬಗ್ಗೆ ದೇಶದಲ್ಲಿ ಸಕಾರಾತ್ಮಕ ಚರ್ಚೆಗಳು ನಡೆಯುತ್ತಿದ್ದು, ಇದನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂಬ ಸಂದೇಶ ನೀಡಿದರು.
ಪದೇ ಪದೇ ನಡೆಯುವ ಚುನಾವಣೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಇದನ್ನು ತಪ್ಪಿಸಲು ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಯೋಜನೆಗೆ ವೇಗ ನೀಡಲಾಗುವುದು ಎಂದು ಅವರು ತಿಳಿಸಿದರು.
47 ವರ್ಷಗಳ ಈ ದೀರ್ಘ ಪಯಣದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಲಕ್ಷಾಂತರ ಕಾರ್ಯಕರ್ತರ ನಿಸ್ವಾರ್ಥ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿದ ಪ್ರಧಾನಿ, 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಾಣದ ಗುರಿಯನ್ನು ಪುನರುಚ್ಚರಿಸಿದರು.








