ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಪರಿಶಿಷ್ಟ ಜಾತಿಯ (SC) ಒಳ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ ಜಾರಿಗೊಳಿಸಲು ಸೂಕ್ತ ಶಿಫಾರಸು ನೀಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ (CS) ನೇತೃತ್ವದಲ್ಲಿ ತಾಂತ್ರಿಕ ಸಮಿತಿಯನ್ನು ರಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ವಿಷಯ ಪಟ್ಟಿಯಲ್ಲಿದ್ದ ಎಲ್ಲಾ ವಿಷಯಗಳ ಚರ್ಚೆ ಮುಗಿದ ಬಳಿಕ, ಸಚಿವ ಕೆ.ಎಚ್. ಮುನಿಯಪ್ಪ ಅವರು ಒಳ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿ ತೀವ್ರ ಅಸಮಾಧಾನ ಹೊರಹಾಕಿದರು. ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಒಳ ಮೀಸಲಾತಿ ವಿಚಾರ ಅತ್ಯಂತ ಸಂಕೀರ್ಣವಾದದ್ದು. ಇದನ್ನು ವೈಜ್ಞಾನಿಕವಾಗಿ ಅನುಷ್ಠಾನಕ್ಕೆ ತರಲು ಸುದೀರ್ಘ ಚರ್ಚೆಯ ಅಗತ್ಯವಿದೆ” ಎಂದು ತಿಳಿಸಿದರು.
ಪ್ರಸ್ತಾವಿತ ಮೀಸಲಾತಿ ಹಂಚಿಕೆ ಪ್ರಮಾಣ:
ಸಭೆಯಲ್ಲಿ ಒಳ ಮೀಸಲಾತಿಯ ವರ್ಗೀಕರಣದ ಬಗ್ಗೆಯೂ ಚರ್ಚೆ ನಡೆದಿದ್ದು, ಒಟ್ಟು ಶೇ.15 ರಷ್ಟು ಎಸ್ಸಿ ಮೀಸಲಾತಿಯನ್ನು ಈ ಕೆಳಗಿನಂತೆ ಹಂಚಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ:
ಎಡಗೈ ಸಮುದಾಯ: ಶೇ. 5.3
ಬಲಗೈ ಸಮುದಾಯ: ಶೇ. 5.3
ಸ್ಪರ್ಶ್ಯ ಹಾಗೂ ಇತರರು: ಶೇ. 4.4
ಮುಂದಿನ ನಡೆ:
ನ್ಯಾಯಾಲಯದ ಮಿತಿಗಳು ಮತ್ತು ತಾಂತ್ರಿಕ ಅಂಶಗಳನ್ನು ಪರಿಗಣಿಸಿ, ಯಾವುದೇ ಲೋಪವಾಗದಂತೆ ಜಾರಿಗೊಳಿಸಲು ತಾಂತ್ರಿಕ ಸಮಿತಿಯ ವರದಿಗಾಗಿ ಸರ್ಕಾರ ಕಾಯುತ್ತಿದೆ. ಏಪ್ರಿಲ್ 24 ರಂದು ನಡೆಯಲಿರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ವಿಶೇಷ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.








