ಚೆನ್ನೈ:ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಈಗ ರಾಜ್ಯಪಾಲರ ರೂಪದಲ್ಲಿ ದೊಡ್ಡ ಅಡೆತಡೆ ಎದುರಾಗಿದೆ. ಬಹುಮತ ಸಾಬೀತುಪಡಿಸಲು ವಿಜಯ್ ಸಲ್ಲಿಸಿರುವ ಶಾಸಕರ ಬೆಂಬಲ ಪತ್ರದ ಕುರಿತು ತಮಿಳುನಾಡು ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿದ್ದು, ನಾಳೆ ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭ ವಿಳಂಬವಾಗುವ ಸಾಧ್ಯತೆಯಿದೆ.
ಟಿವಿಕೆ ಪಕ್ಷವು ಮೈತ್ರಿಕೂಟದ ಬೆಂಬಲದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದೆ. ಆದರೆ, ಶಾಸಕರ ಸಹಿ ಇರುವ ಪತ್ರಗಳಲ್ಲಿ ತಾಂತ್ರಿಕ ದೋಷಗಳಿವೆ ಅಥವಾ ಬೆಂಬಲದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮೇ 7ರಂದು (ನಾಳೆ) ಸಂಜೆ ಚೆನ್ನೈನಲ್ಲಿ ಅದ್ಧೂರಿ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ಧತೆ ನಡೆದಿತ್ತು. ಆದರೆ, ರಾಜಭವನದಿಂದ ಗ್ರೀನ್ ಸಿಗ್ನಲ್ ಸಿಗದ ಕಾರಣ ಕಾರ್ಯಕ್ರಮವು ಅನಿಶ್ಚಿತತೆಯತ್ತ ಸಾಗಿದೆ.
ವಿಜಯ್ ಅವರ ಪಕ್ಷಕ್ಕೆ ಕಾಂಗ್ರೆಸ್ ನೀಡುತ್ತಿರುವ ಬೆಂಬಲದ ತಾಂತ್ರಿಕ ಅಂಶಗಳ ಬಗ್ಗೆಯೂ ರಾಜ್ಯಪಾಲರು ಸ್ಪಷ್ಟನೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.








