ಬೆಂಗಳೂರು: ಕರ್ತವ್ಯದ ಸಮಯದಲ್ಲಿ ಮದ್ಯಪಾನ, ಗುಟ್ಕಾ ಸೇವನೆ ಹಾಗೂ ಸಹೋದ್ಯೋಗಿಗಳೊಂದಿಗೆ ಗಲಾಟೆ ನಡೆಸಿ ದುರ್ನಡತೆ ತೋರಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವೈದ್ಯಾಧಿಕಾರಿಯೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪ್ರಕರಣದ ವಿವರ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿ.ವಿ. ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಡಾ. ಚಂದ್ರಮೌಳಿ ಎಸ್. ಅಮಾನತುಗೊಂಡವರು. ಫೆಬ್ರವರಿ 8, 2025 ರಂದು ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದಾಗ ಇವರು ಆಸ್ಪತ್ರೆಯ ಅಡುಗೆ ಕೋಣೆಯಲ್ಲಿ ಮದ್ಯಪಾನ ಮಾಡುತ್ತಿರುವುದು ಕಂಡುಬಂದಿತ್ತು.
ಆಸ್ಪತ್ರೆಯಲ್ಲಿ ಇಂತಹ ಕೃತ್ಯ ಎಸಗಬಾರದೆಂದು ಸಹೋದ್ಯೋಗಿ ಡಾ. ಹನಮಂತರಾಯ ಅವರು ತಿಳಿಸಿದಾಗ, ಡಾ. ಚಂದ್ರಮೌಳಿ ಅವರು ಗಲಾಟೆ ಆರಂಭಿಸಿ ವಿಡಿಯೋ ಮಾಡಿಕೊಂಡಿದ್ದರು ಎಂಬ ಅಂಶ ತನಿಖಾ ವರದಿಯಿಂದ ತಿಳಿದುಬಂದಿದೆ.
ತನಿಖಾ ವರದಿಯ ಮುಖ್ಯಾಂಶಗಳು:
-
ಡಾ. ಚಂದ್ರಮೌಳಿ ಅವರು ಹಗಲು ಮತ್ತು ರಾತ್ರಿ ವೇಳೆ ಯಾವಾಗಲೂ ಮದ್ಯಪಾನ ಹಾಗೂ ಗುಟ್ಕಾ ಸೇವಿಸಿ ಕರ್ತವ್ಯಕ್ಕೆ ಬರುತ್ತಾರೆ ಎಂದು ಆಸ್ಪತ್ರೆಯ ಸಿಬ್ಬಂದಿಗಳು ಲಿಖಿತ ಹೇಳಿಕೆ ನೀಡಿದ್ದಾರೆ.
-
ಇವರ ವರ್ತನೆಯಿಂದ ಆಸ್ಪತ್ರೆಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ಸಿಗುತ್ತಿದೆ ಮತ್ತು ಪದೇ ಪದೇ ಗಲಾಟೆಗಳು ನಡೆಯುತ್ತಿವೆ ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.
-
ಮೇಲ್ನೋಟಕ್ಕೆ ಕರ್ತವ್ಯಲೋಪ, ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಆಯುಕ್ತರ ಆದೇಶ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಗುರುದತ್ತ ಹೆಗಡೆ (IAS) ಅವರು ಮೇ 6, 2026 ರಂದು ಈ ಅಮಾನತು ಆದೇಶ ಹೊರಡಿಸಿದ್ದಾರೆ. ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ಅಮಾನತ್ತಿನ ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆಯಲು ಇವರ ಲೀನ್ ಅನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲ್ಲೂಕಿನ ಕುಕನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಪೂರ್ವಾನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡಬಾರದೆಂದು ಸೂಚಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..









