ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ಜಾಲದ ವಿರುದ್ಧ ಬೆಂಗಳೂರು ಪೊಲೀಸರ ಸಮರ ಮುಂದುವರೆದಿದೆ. ಅಶೋಕನಗರ, ಮಲ್ಲೇಶ್ವರಂ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅನ್ಯ ರಾಜ್ಯದ ಮೂವರ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಮೊಹಮ್ಮದ್ ಹಮ್ಜಾ ಹಾಗೂ ಯಾಸೀರ್ ಅಹಮದ್, ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಮೊಹಮ್ಮದ್ ಅಫ್ರಾನ್, ಮೊಹಮ್ಮದ್ ಸಬೀತ್ ಹಾಗೂ ಶ್ರೀನಾಥ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ ಒಟ್ಟು 1.28 ಕೋಟಿ ಮೌಲ್ಯದ 3 ಕೆಜಿ 686 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಹೈಡ್ರೋ ಗಾಂಜಾ ಖರೀದಿಸಿ ತರುತ್ತಿದ್ದ ಆರೋಪಿಗಳು ನಗರದಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಲ್ಲೇಶ್ವರಂ ಪೊಲೀಸರಿಂದ ಬಂಧಿಸಲ್ಪಟ್ಟ ಆರೋಪಿಗಳು ಮಡಿವಾಳದಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು. ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದರು. ಕೇರಳದಿಂದ ಹೈಡ್ರೋಗಾಂಜಾ ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.








