ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ ತಕ್ಷಣ ಅವರನ್ನು ಅಮಾನತು ಮಾಡಿ. ಸಾರ್ವಜನಿಕರನ್ನು ಸತಾಯಿಸುವುದನ್ನು ಮೊದಲು ನಿಲ್ಲಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ನಗರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಈ-ಸ್ವತ್ತು’ ವಿಳಂಬಕ್ಕೆ ಶಾಸಕರ ಆಕ್ರೋಶ
ನಗರಸಭೆಯ ಕೆಲವು ವಿಭಾಗಗಳ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ವಿಶೇಷವಾಗಿ ‘ಈ-ಸ್ವತ್ತು’ ದಾಖಲೆಗಳನ್ನು ಕಾಲಮಿತಿಯಲ್ಲಿ ಮಾಡಿಕೊಡುತ್ತಿಲ್ಲ. ಬ್ರೋಕರ್ಗಳನ್ನು ಕರೆದುಕೊಂಡು ಹೋದರೆ ಮಾತ್ರ ಕೆಲಸವಾಗುತ್ತದೆ ಎಂದು ಜನ ನನ್ನ ಬಳಿ ಅಹವಾಲು ತೋಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಡುವ ಅಧಿಕಾರಿಗಳು ಇಲ್ಲಿರುವುದು ಬೇಡ. ಸರಿಯಾಗಿ ಕೆಲಸ ಮಾಡಿ, ಇಲ್ಲವಾದರೆ ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ಶಾಸಕರು ತರಾಟೆಗೆ ತೆಗೆದುಕೊಂಡರು.
ಸಂಚಾರ ಅವ್ಯವಸ್ಥೆ ಮತ್ತು ರಸ್ತೆ ಕಾಮಗಾರಿ ವಿಳಂಬ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕು ಎಂದು ಸೂಚಿಸಿದ ಶಾಸಕರು, ಬಿ.ಎಚ್. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಸಮರ್ಪಕ ನಿರ್ವಹಣೆ ಇಲ್ಲದೆ ಚರಂಡಿ (ಡ್ರೈನೇಜ್) ನೀರು ಉಕ್ಕಿ ಹರಿದಿದ್ದರಿಂದ ಕಿರಾಣಿ ಅಂಗಡಿಯೊಂದರ 2 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸಾಮಗ್ರಿ ನೀರುಪಾಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಸ್ತೆ ಅವ್ಯವಸ್ಥೆಯ ಜೊತೆಗೆ ಫುಟ್ಪಾತ್ ಮೇಲೆ ಗೂಡಂಗಡಿಗಳನ್ನು ಇಟ್ಟುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ತಕ್ಷಣ ಅವುಗಳನ್ನು ತೆರವುಗೊಳಿಸಬೇಕು. ಪೊಲೀಸ್ ಉಪಾಧೀಕ್ಷರು ಸರಿಯಾಗಿ ಕೆಲಸ ಮಾಡುತ್ತಿಲ್ಲ, ನಗರದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಿ.ಎಚ್. ರಸ್ತೆಯಲ್ಲಿ ತಕ್ಷಣ ಬಸ್ ನಿಲ್ದಾಣ ಮಾಡಬೇಕಾಗಿರುವುದರಿಂದ ಯುನೈಟೆಡ್ ಪೆಟ್ರೋಲ್ ಬಂಕ್ ಪಕ್ಕದಲ್ಲಿ ತಕ್ಷಣ ಚರಂಡಿ ನಿರ್ಮಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಾರ್ಕೆಟ್ ರಸ್ತೆ ಅಗಲೀಕರಣ: ತಕ್ಷಣ ಭೂಸ್ವಾಧೀನಕ್ಕೆ ಸೂಚನೆ
“ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸುಮಾರು 35 ಕೋಟಿ ರೂ. ಅನುದಾನವಿದೆ. ಆದರೆ ಕೆಲವರು ರಸ್ತೆಗೆ ಜಾಗ ಬಿಟ್ಟುಕೊಡದೆ ಇರುವುದರಿಂದ ಜನರು ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ಅನೇಕ ಸಭೆಗಳನ್ನು ನಡೆಸಿ, ನೋಟಿಸ್ ನೀಡಿದರೂ ಕೆಲವರು ಬಗ್ಗುತ್ತಿಲ್ಲ. ಇನ್ನು ಮುಂದೆ ಇದನ್ನು ಸಹಿಸಲು ಸಾಧ್ಯವಿಲ್ಲ. ಈಗಾಗಲೇ ಮೂರ್ನಾಲ್ಕು ಜಿಲ್ಲಾಧಿಕಾರಿಗಳು ಬಂದು ಹೋದರೂ ಮಾರ್ಕೆಟ್ ರಸ್ತೆ ಅಗಲೀಕರಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಇನ್ನು ತಡ ಮಾಡದೆ ತಕ್ಷಣವೇ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಿ.” — ಗೋಪಾಲಕೃಷ್ಣ ಬೇಳೂರು, ಶಾಸಕರು, ಸಾಗರ
ಮುಂದುವರಿದು ಮಾತನಾಡಿದ ಅವರು, ಒಳಚರಂಡಿ (ಯುಜಿಡಿ) ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಬೇಕು. ನಗರದಲ್ಲಿ ಪೌರಕಾರ್ಮಿಕರ ಕೊರತೆಯಿಂದಾಗಿ ಸ್ವಚ್ಛತಾ ಕಾರ್ಯ ವಿಳಂಬವಾಗುತ್ತಿದೆ. ಹೀಗಾಗಿ ಹೆಚ್ಚುವರಿಯಾಗಿ 25 ಜನರನ್ನು ನೇರ ನೇಮಕಾತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಅಧಿಕಾರಿಗಳ ಕ್ಲಾಸ್ ತಗೆದುಕೊಂಡ ಜಿಲ್ಲಾಧಿಕಾರಿ
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು, ಒಳಚರಂಡಿ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಮುಗಿಸಬೇಕು ಹಾಗೂ ಸೀಪೇಜ್ ಪ್ಲಾಂಟ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ತಕ್ಷಣವೇ ಜಾಗವನ್ನು ಭೂಸ್ವಾಧೀನಕ್ಕೆ ತೆಗೆದುಕೊಳ್ಳಬೇಕು ಎಂದು ಆದೇಶಿಸಿದರು.
ಖಾಯಂ ಪೌರಕಾರ್ಮಿಕರ ಕೊರತೆ ಇರುವ ಕಡೆ ನೇರ ಪಾವತಿ ಆಧಾರದ ಮೇಲೆ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದ್ದರೂ, ನಗರಸಭೆ ಅದನ್ನು ಏಕೆ ಬಳಸಿಕೊಂಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ನಗರ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಕಡ್ಡಾಯ. ಕಳೆದ ಮೂರ್ನಾಲ್ಕು ದಿನಗಳಿಂದ ನೀರಿನ ಸಮಸ್ಯೆ ಉಂಟಾಗಿದ್ದರೂ ನೀವೇನು ಮಾಡುತ್ತಿದ್ದೀರಿ? ತಕ್ಷಣ ನೀರಿನ ಕೊರತೆ ಇರುವ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಶೀಲ್ದಾರ್ ಪ್ರದೀಪ್, ಪೌರಾಯುಕ್ತ ಎಚ್.ಕೆ. ನಾಗಪ್ಪ, ಯೋಜನಾ ನಿರ್ದೇಶಕ ರಂಗಸ್ವಾಮಿ ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.








