ಬೆಂಗಳೂರು: ರಾಜ್ಯದ ಸರ್ಕಾರಿ ಶೈಕ್ಷಣಿಕ ವಲಯದಲ್ಲಿ ಅಭೂತಪೂರ್ವ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ಯೋಜನೆಗೆ ಜೂನ್ 1 ರಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು, ಶಿಕ್ಷಣ ವ್ಯವಸ್ಥೆಯ ಸುಧಾರಣೆ ಹಾಗೂ ಇತ್ತೀಚಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಶಿವಮೊಗ್ಗದಲ್ಲಿ ಅದ್ಧೂರಿ ಚಾಲನೆ; ಒಂದೇ ಸೂರಿನಡಿ ಎಲ್ಕೆಜಿಯಿಂದ ಪಿಯುಸಿ
ಜೂನ್ 1 ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಭವ್ಯ ಸಮಾರಂಭದಲ್ಲಿ ಈ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಉನ್ನತ ಮಟ್ಟದ ಶಿಕ್ಷಣ ನೀಡುವುದು ಈ ಯೋಜನೆಯ ಆಶಯವಾಗಿದೆ. ಈ ವಿಶೇಷ ಯೋಜನೆಯಡಿ, ಒಂದೇ ಸೂರಿನಡಿ ಎಲ್ಕೆಜಿಯಿಂದ (LKG) ಪಿಯುಸಿವರೆಗೆ ಶಿಕ್ಷಣ ಒದಗಿಸಲಾಗುತ್ತದೆ. ಅತ್ಯಾಧುನಿಕ ಮೂಲಸೌಕರ್ಯ ಒಳಗೊಳ್ಳಲಿರುವ ಪ್ರತಿ ಕೆಪಿಎಸ್ ಶಾಲೆಯಲ್ಲಿ ಬರೋಬ್ಬರಿ 1200 ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
ಎರಡು ವರ್ಷಗಳಲ್ಲಿ 800 ಶಾಲೆಗಳು: ಸಿಎಂ ಕಟ್ಟುನಿಟ್ಟಿನ ಗಡುವು
ರಾಜ್ಯದ ಮೂಲೆ ಮೂಲೆಗೂ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ ಒಟ್ಟು 800 ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಸಜ್ಜುಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರಸಕ್ತ ಸಾಲಿನಲ್ಲೇ 800 ಶಾಲೆಗಳನ್ನು ಆರಂಭಿಸಲು ಬೇಕಾದ ಟೆಂಡರ್ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಪೂರ್ಣಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಡಕ್ ನಿರ್ದೇಶನ ನೀಡಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ; ಉಚಿತ ಬಸ್ ಸೌಲಭ್ಯ
ಜಾಗತಿಕ ಮಟ್ಟದ ಸ್ಪರ್ಧೆಗೆ ಸರ್ಕಾರಿ ಶಾಲಾ ಮಕ್ಕಳನ್ನು ಸಜ್ಜುಗೊಳಿಸಲು ಈ ಶಾಲೆಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಮಾಧ್ಯಮಗಳಲ್ಲಿ ಗುಣಮಟ್ಟದ ಬೋಧನೆ ಮಾಡಲಾಗುತ್ತದೆ. ಇದರೊಂದಿಗೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಎದುರಾಗುವ ಸಾರಿಗೆ ಸಮಸ್ಯೆಯನ್ನು ನೀಗಿಸಲು ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕವಾಗಿ ‘ಶಾಲಾ ಬಸ್’ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಪರಿಶೀಲನೆ ನಡೆಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇದು ಹಳ್ಳಿಗಳ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.
ಶಿಕ್ಷಕರ ನೇಮಕಾತಿ ಹಾಗೂ ಉಚಿತ ನೋಟ್ ಬುಕ್ ವಿತರಣೆ
ಯೋಜನೆಯ ಯಶಸ್ಸಿಗೆ ಪೂರಕವಾಗಿ ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಅಗತ್ಯವಿರುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ತಕ್ಷಣವೇ ಸಲ್ಲಿಸುವಂತೆ ಆದೇಶಿಸಲಾಗಿದೆ. ಇದರೊಂದಿಗೆ, ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಉಚಿತ ಪಠ್ಯಪುಸ್ತಕಗಳ ಜೊತೆಗೆ ಈ ಬಾರಿ ಉಚಿತ ನೋಟ್ ಬುಕ್ (ಬರವಣಿಗೆ ಪುಸ್ತಕಗಳನ್ನು) ಸಹ ವಿತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಸಮಾಲೋಚನೆ ನಡೆಯುತ್ತಿದ್ದು, ಶೀಘ್ರದಲ್ಲೇ ಈ ಬಗ್ಗೆಯೂ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.
ಸಭೆಯಲ್ಲಿ ಮಾಹಿತಿ ನೀಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ಸ್ಪಷ್ಟ ನಿರ್ದೇಶನದಂತೆ ಶಿಕ್ಷಕರು ಮತ್ತು ಪೋಷಕರ ಸಭೆ ನಡೆಸಿ, ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು, ರಾಜ್ಯಮಟ್ಟದಲ್ಲಿ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿದ್ದರಿಂದ ಈ ಬಾರಿಯ ಫಲಿತಾಂಶ ಅತ್ಯುತ್ತಮವಾಗಿ ಮೂಡಿಬಂದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಸಗಿ ಶಾಲೆಗಳಿಗಿಂತ ಶೇ. 2ರಷ್ಟು ಹೆಚ್ಚು ಫಲಿತಾಂಶ ದಾಖಲಾಗಲು ಅಲ್ಲಿ ನೀಡಲಾದ ವಿಶೇಷ ತರಬೇತಿಯೇ ಕಾರಣ. ಗಮನಾರ್ಹ ಅಂಶವೆಂದರೆ, ಈ ಬಾರಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.








