ಚೆನ್ನೈ: ಬಕ್ರೀದ್ ಹಬ್ಬದ ಮುನ್ನಾದಿನ ಅಥವಾ ಹಬ್ಬದ ದಿನದಂದು ಯಾವುದೇ ಕಾರಣಕ್ಕೂ ಗೋವು ಅಥವಾ ಕರುಗಳನ್ನು ವಧೆ ಮಾಡದಂತೆ ನೋಡಿಕೊಳ್ಳಬೇಕೆಂದು ಮದ್ರಾಸ್ ಹೈಕೋರ್ಟ್ ಬುಧವಾರ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.
ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಮತ್ತು ನ್ಯಾಯಮೂರ್ತಿ ವಿ. ಲಕ್ಷ್ಮಣನ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು, ರಾಜ್ಯದ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ನಿರ್ದೇಶನಗಳನ್ನು ನೀಡಿದೆ.
“ನಾವು ಈ ರಿಟ್ ಅರ್ಜಿಯನ್ನು ಪುರಸ್ಕರಿಸುತ್ತೇವೆ ಮತ್ತು ಬಕ್ರೀದ್ ಹಬ್ಬದಂದು ಅಥವಾ ಯಾವುದೇ ದಿನದಂದು ಗೋವು ಅಥವಾ ಕರುಗಳನ್ನು ವಧೆ ಮಾಡದಂತೆ ನೋಡಿಕೊಳ್ಳಲು ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇವೆ. ಸರ್ಕಾರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಈ ಆದೇಶದ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲೇಬೇಕು” ಎಂದು ನ್ಯಾಯಾಲಯ ಹೇಳಿದೆ.
ಇಂದು ಮಕ್ಕಳ್ ಕಚ್ಚಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋವಧೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯಲು ಮತ್ತು ಗೋವುಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳುವಂತೆ ಮೇ 18ರಂದು ಮನವಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ಆ ಮನವಿಯನ್ನು ಪರಿಗಣಿಸಲಿಲ್ಲ ಎಂದು ಅರ್ಜಿದಾರರು ದೂರಿದ್ದರು.
ಸರ್ಕಾರದ ಪರವಾಗಿ ಮಂಡಿಸಲಾದ ಪ್ರತಿ-ಅಫಿಡವಿಟ್ನಲ್ಲಿ, ಸಂಚಾರಕ್ಕೆ ಅಡ್ಡಿಯಾಗದಂತೆ ಅಥವಾ ಇತರ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಸಾರ್ವಜನಿಕವಲ್ಲದ ಪ್ರದೇಶಗಳಲ್ಲಿ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡರು.
ಸಂವಿಧಾನದ 48ನೇ ವಿಧಿಯ ಪ್ರಕಾರ, ಗೋವುಗಳು, ಕರುಗಳು ಮತ್ತು ಇತರ ಹೈನುಗಾರಿಕೆ ಹಾಗೂ ಕೃಷಿ ದನಗಳ ವಧೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ನೆನಪಿಸಿತು. ಸಂವಿಧಾನ ರಚನಾ ಸಭೆಯ ಚರ್ಚೆಗಳ ಉಲ್ಲೇಖ ಮಾಡಿದ ಪೀಠ, ಗೋವು ಭಾರತೀಯ ನಾಗರಿಕತೆಯಲ್ಲಿ ಪೂಜ್ಯ ಪ್ರಾಣಿಯಾಗಿದೆ. ಮಹಾತ್ಮ ಗಾಂಧೀಜಿಯವರಿಗೂ ಗೋ ರಕ್ಷಣೆ ಅತ್ಯಂತ ಪ್ರಿಯವಾದ ವಿಷಯವಾಗಿತ್ತು ಮತ್ತು ಮುಸ್ಲಿಂ ರಾಜರ ಆಳ್ವಿಕೆಯಲ್ಲೂ ಗೋಹತ್ಯೆಯನ್ನು ನಿಷೇಧಿಸಲಾಗಿತ್ತು ಎಂದು ಅಭಿಪ್ರಾಯಪಟ್ಟಿತು.
ಬಕ್ರೀದ್ ಸಂದರ್ಭದಲ್ಲಿ ಗೋವಧೆ ಮಾಡುವುದು ಮುಸ್ಲಿಮರ ಪಾಲಿಗೆ ಅತ್ಯಗತ್ಯವಾದ ಧಾರ್ಮಿಕ ಆಚರಣೆಯಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಸುಪ್ರೀಂ ಕೋರ್ಟ್ನ ಈ ಹಿಂದಿನ ತೀರ್ಪುಗಳನ್ನು (ಮೊಹಮ್ಮದ್ ಹನೀಫ್ ಖುರೇಷಿ Vs ಬಿಹಾರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರ Vs ಅಶುತೋಷ್ ಲಾಹಿರಿ) ಉಲ್ಲೇಖಿಸಿದ ಪೀಠ, ಬಕ್ರೀದ್ನಲ್ಲಿ ಗೋಹತ್ಯೆಯು ಧಾರ್ಮಿಕ ಆಚರಣೆಯ ಅವಿಭಾಜ್ಯ ಅಂಗವಲ್ಲ ಮತ್ತು ಅದು ಕಡ್ಡಾಯವಲ್ಲ ಎಂದು ಹೇಳಿದೆ.
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ, 1958ರ ಸೆಕ್ಷನ್ 4ರ ಪ್ರಕಾರ, 10 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿಗೆ ಅಸಮರ್ಥವಾದ ದನಗಳನ್ನು ಮಾತ್ರ ವಧೆಗೆ ಅನುಮತಿಸಬಹುದು ಎಂದು ಉಲ್ಲೇಖಿಸಿದ ನ್ಯಾಯಾಲಯ, ಅದಕ್ಕೂ ಅಧಿಕಾರಿಗಳಿಂದ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿತು. ಹಾಲಿನ ಉತ್ಪಾದನೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸಲು ರಾಜ್ಯ ಸರ್ಕಾರವು ಗೋವಧೆಯನ್ನು ನಿಷೇಧಿಸಿ ಹೊರಡಿಸಿದ ಕಾರ್ಯಕಾರಿ ಆದೇಶವನ್ನು ನ್ಯಾಯಾಲಯವು ಎತ್ತಿಹಿಡಿದಿದೆ.








