ಶಿವಮೊಗ್ಗ: ಮಳೆಗಾಲದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಅವಘಡಗಳನ್ನು ಎದುರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಈ ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕದೆ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಜಂಟಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನೆ ಬಿದ್ದರೆ ಚೌಕಾಸಿ ಮಾಡದೆ ಪರಿಹಾರ ನೀಡಿ
ಮಳೆ ಗಾಳಿಗೆ ಮನೆ ಕುಸಿದು ಬಿದ್ದರೆ ತಕ್ಷಣವೇ ತಹಶೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸೂಚಿಸಿದ ಶಾಸಕರು, “ಮನೆ ಕಳೆದುಕೊಂಡ ಬಡವರ ವಿಷಯದಲ್ಲಿ ಯಾವುದೇ ರೀತಿಯ ಚೌಕಾಸಿ ಮಾಡದೆ, ಅವರಿಗೆ ನಿಯಮಾನುಸಾರ ಸಿಗಬೇಕಾದ ಗರಿಷ್ಠ ಪರಿಹಾರವನ್ನು ತಲುಪಿಸಲು ಅಧಿಕಾರಿಗಳು ಮಾನವೀಯತೆಯಿಂದ ಸಹಕರಿಸಬೇಕು” ಎಂದರು.
ಮಳೆಮಾಪನ ಕೇಂದ್ರಗಳ ಸುಸ್ಥಿತಿಗೆ ಆದೇಶ; ವಿಮೆ ತಾರತಮ್ಯಕ್ಕೆ ಬ್ರೇಕ್
“ತಾಲ್ಲೂಕಿನಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ. ಕೃಷಿ ಇಲಾಖೆಯಲ್ಲಿ ಅಗತ್ಯ ದಾಸ್ತಾನು ಮಾಡಿಕೊಳ್ಳಲಾಗಿದೆ. ಆದರೆ, ಮಳೆಮಾಪನ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು. ಕಳೆದ ವರ್ಷ ಸೊರಬ, ಶಿಕಾರಿಪುರ ತಾಲ್ಲೂಕಿನ ರೈತರಿಗೆ ನ್ಯಾಯಸಮ್ಮತ ಬೆಳೆ ವಿಮೆ ಪರಿಹಾರ ಬಂದಿದೆ. ಆದರೆ ಸಾಗರ ತಾಲ್ಲೂಕಿನ ರೈತರಿಗೆ ತೀರ ಕಡಿಮೆ ಪರಿಹಾರ ಬಂದಿದ್ದು, ಈ ಬಾರಿ ಅಂತಹ ತಾರತಮ್ಯ ನಡೆಯಬಾರದು. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಒಂದು ವೇಳೆ ತಾಂತ್ರಿಕ ದೋಷದಿಂದಾಗಿ ಈ ಬಾರಿಯೂ ಪರಿಹಾರ ಕಡಿಮೆ ಬಂದರೆ ಅದಕ್ಕೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.
ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿ ಹಾಗೂ ಜೋಗ ಜಲಪಾತದ ಪ್ರವಾಸೋದ್ಯಮಕ್ಕೆ ಒತ್ತು
ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು, ತೀರಾ ದುಸ್ಥಿತಿಯಲ್ಲಿರುವ ಶಾಲೆಗಳ ಪಟ್ಟಿ ಮಾಡಿ ತಕ್ಷಣವೇ ರಿಪೇರಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು. ಇನ್ನು ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ ಎಂದರು.
ಜೋಗ ಜಲಪಾತದ ಕುರಿತು ಮಾತನಾಡುತ್ತಾ, “ಜೋಗ ಅಭಿವೃದ್ಧಿ ಕಾಮಗಾರಿ 90 ಕೋಟಿ ರೂ. ವೆಚ್ಚದಲ್ಲಿ ಭರದಿಂದ ಸಾಗುತ್ತಿದ್ದು, ಇನ್ನೂ 90 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಮಳೆಗಾಲದಲ್ಲಿ ಜಲಪಾತದ ವೈಭವ ವೀಕ್ಷಿಸಲು ಬರುವ ದೇಶ-ವಿದೇಶಿ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ರಕ್ಷಣೆ ಹಾಗೂ ಸೌಕರ್ಯ ಒದಗಿಸಲು ಗಮನ ಹರಿಸಲಾಗಿದೆ” ಎಂದು ಮಾಹಿತಿ ನೀಡಿದರು.
ಅರಣ್ಯ ಇಲಾಖೆ ಕಿರುಕುಳಕ್ಕೆ ಎಚ್ಚರಿಕೆ ಹಾಗೂ ನಗರ ಸ್ವಚ್ಛತೆ
“ಅರಣ್ಯ ಇಲಾಖೆಯ ಅಧಿಕಾರಿಗಳು ಮಲೆನಾಡಿನ ರೈತರಿಗೆ ಅನಗತ್ಯವಾಗಿ ಕಿರುಕುಳ ನೀಡಬಾರದು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಕೈಹಾಕಿದರೆ ಸರ್ಕಾರದಿಂದ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ” ಎಂದು ಶಾಸಕರು ಎಚ್ಚರಿಕೆ ನೀಡಿದರು. ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ, ನಗರಸಭೆಯು ಸ್ವಚ್ಛತೆಗೆ ಆದ್ಯತೆ ನೀಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಅಪಾಯಕಾರಿ ಗಿಡಗಂಟಿಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಸೂಚಿಸಿದರು. ಇದೇ ವೇಳೆ ಸೊರಬ ರಸ್ತೆ ಅಗಲೀಕರಣ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪ್ರಕಟಿಸಿದರು.
ಈ ಸಭೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಶೀಲ್ದಾರ್ ಡಾ. ಪ್ರತಿಭಾ ಆರ್., ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್, ಇಓ ಮೌನೇಶ್, ನಗರಸಭೆ ಪೌರಾಯುಕ್ತ ನಾಗಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದಂತ ಶಿವಪ್ರಕಾಶ್, ಬಿಇಓ ಸದಾನಂದ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು








