ಧಾರವಾಡ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಯಲ್ಲಿ ಎಲ್ಲ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಶಿಕ್ಷಕರ, ಆಡಳಿತ ಮಂಡಳಿಗಳ ಮತ್ತು ಇಲಾಖೆಯ ಪಾತ್ರ ಮುಖ್ಯವಾಗಿದೆ. ಪ್ರಸ್ತಕ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಕಡಿಮೆಯಾದಲ್ಲಿ ಸಂಬಂಧಿಸಿದವರೊಂದಿಗೆ, ಅತಿಥಿ ಶಿಕ್ಷಕರ ಮೇಲೂ ಕ್ರಮಕೈಗೊಳ್ಳಲಾಗುವುದು. ಮತ್ತು ಭೋದನಾ ಗುಣಮಟ್ಟ ವಿಶ್ಲೇಷಿಸಿ, ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಎಚ್ಚರಿಕೆ ನೀಡಿದರು.
ಅವರು ಇಂದು (ಫೆ.12) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪೂರ್ವಸಿದ್ಧತಾ ಪರೀಕ್ಷೆಯು ಧಾರವಾಡ ಜಿಲ್ಲೆಯ 7 ತಾಲೂಕುಗಳ ಸರ್ಕಾರಿ, ಅನುದಾನಿತ ಹಾಗೂ ಅನುದಾನಿತ ಪ್ರೌಢಶಾಲೆಗಳು ನಿರೀಕ್ಷಿತ ಫಲಿತಾಂಶ ಸಾಧಿಸದ ಮುಖ್ಯೋಪಾಧ್ಯಾಯರ ಹಾಗೂ ಎಲ್ಲ ಪ್ರೌಢಶಾಲೆಗಳ ನೋಡಲ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಫಲಿತಾಂಶ ಸುಧಾರಣೆಯಲ್ಲಿ ಕ್ರಮವಹಿಸಿದ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕ್ರಮವಹಿಸದ ಅನುದಾನಿತ, ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಹಿಂಪಡೆಯಲು ಶಾಲೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಶಾಲೆ ನವೀಕರಣ ಮಾಡುವಾಗ ಕೇವಲ ಭೌತಿಕ ಸೌಕರ್ಯಗಳನ್ನು ಮಾತ್ರ ಪರಿಗಣಿಸದೇ ಆ ಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಹಾಗೂ ಗುಣಮಟ್ಟವನ್ನು ಪರಿಗಣಿಸಬೇಕೆಂದು ಅವರು ತಿಳಿಸಿದರು.
ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಧಾರವಾಡ ಗ್ರಾಮೀಣ-02, ಧಾರವಾಡ ಶಹರ -08, ಹುಬ್ಬಳ್ಳಿ ಗ್ರಾಮೀಣ-04, ಹುಬ್ಬಳ್ಳಿ ಶಹರ -16, ಕಲಘಟಗಿ-01, ಕುಂದಗೋಳ-03, ನವಲಗುಂದ- 03 ಸೇರಿದಂತೆ ಒಟ್ಟು 37 ಪ್ರೌಢಶಾಲೆಗಳಲ್ಲಿ ಶೇ. 50 ಕ್ಕಿಂತ ಕಡಿಮೆ ಫಲಿತಾಂಶ ಬಂದಿದೆ. ಅನುದಾನ ರಹಿತ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಫಲಿತಾಂಶ ಕಡಿಮೆ ಆಗಿರುವುದು ವಿಶ್ಲೇಷಣೆಯಿಂದ ಕಂಡುಬಂದಿದೆ. ಇಂತಹ ಶಾಲೆಗಳ ಮಾನ್ಯತೆ ನವೀಕರಣ ಹಿಂಪಡೆಯಲು ಕ್ರಮವಹಿಸಬೇಕು. ಹಾಗೂ ಅನುದಾನಿತ ಶಾಲೆಗಳ ಅನುದಾನವನ್ನು ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉಪನಿರ್ದೇಶಕರಿಗೆ ಸಿಇಓ ಭುವನೇಶ ಪಾಟೀಲ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಹಾಗೂ ಪ್ರಸ್ತುತ ವರ್ಷದಲ್ಲಿ ಪೂರ್ವಸಿದ್ಧತಾ ಪರೀಕ್ಷೆ-1 ಮತ್ತು ಪರೀಕ್ಷೆ-2 ರಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಮಾಡಿದ ಶಾಲೆಗಳಲ್ಲಿ ಫಲಿತಾಂಶ ಕಡಿಮೆಯಾಗಲು ಕಾರಣಗಳೇನು ಪರಿಶೀಲಿಸಬೇಕು. ಮತ್ತು ಫಲಿತಾಂಶ ಸುಧಾರಣೆಯಲ್ಲಿ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ನೋಡಲ್ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕು. ಆಯಾ ಕ್ಷೇತ್ರಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನವನ್ನು ನಿರಂತರ ಭೇಟಿಯ ಮೂಲಕ ನೀಡಬೇಕೆಂದು ಅವರು ತಿಳಿಸಿದರು.
2025-26 ನೇ ಸಾಲಿನ ಪೂರ್ವಸಿದ್ಧತಾ ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಫಲಿತಾಂಶ ವಿಶ್ಲೇಷಣೆ ಮಾಡಿ, ಪೂರ್ವಸಿದ್ಧತಾ ಪರೀಕ್ಷೆ-3 ರ ಹಾಗೂ ವಾರ್ಷಿಕ ಪರೀಕ್ಷೆಯಲ್ಲಿ ನಿರಂತರವಾಗಿ ಕಡಿಮೆ ಫಲಿತಾಂಶ ಸಾಧಿಸಿದರೆ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಸ್ಥಗಿತಗೊಳಿಸಲು ಹಾಗೂ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮಾನ್ಯತೆ ನವೀಕರಣ ಹಿಂಪಡೆಯುವಲ್ಲಿ ಶಿಕ್ಷಣ ಇಲಾಖೆ ಕ್ರಮವಹಿಸಬೇಕು. ಅನುμÁ್ಠನಾಧಿಕಾರಿಗಳಾದ ಸಿಆರ್ಪಿಾ, ಬಿಆರ್ಪಿವ, ಬಿಆರ್ಸಿೇ ಅವರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಿರಂತರ ಭೇಟಿ ನೀಡಿ, ಶೈಕ್ಷಣಿಕವಾಗಿ ಶಾಲೆಗಳ ಗುಣಾತ್ಮಕ ಶಿಕ್ಷಣ ಹೆಚ್ಚಿಸುವಲ್ಲಿ ಕ್ರಮವಹಿಸಬೇಕು. ಮತ್ತು ಶಾಲಾ ಭೇಟಿ, ಸಂದರ್ಶನದ ವರದಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಮೂಲಕ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಅವರು ಸೂಚಿಸಿದರು.
ಜಿಲ್ಲೆಯ ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು ಅತಿಥಿ ಶಿಕ್ಷಕರು ಸರಿಯಾದ ಬೋಧನೆ ಮಾಡುವಂತೆ ನಿಗಾವಹಿಸಬೇಕು. ಹಾಗೂ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡದಿರುವವರ ಮಾಹಿತಿಯನ್ನು ನೀಡಬೇಕು. ಇಂತಹ ಅತಿಥಿ ಶಿಕ್ಷಕರನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕರ್ತವ್ಯಕ್ಕೆ ಹಾಜರುಪಡಿಸಬಾರದು. 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಅತಿಥಿ ಶಿಕ್ಷಕರ ಹಾಗೂ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರ ಕಾರ್ಯನಿರ್ವಹಣೆ ಕುರಿತು ವಿಶ್ಲೇಷಣೆ ಮಾಡಿ, ಉಪನಿರ್ದೇಶಕರು ವರದಿ ಸಲ್ಲಿಸಬೇಕು. ಮತ್ತು ಅತಿಥಿ ಶಿಕ್ಷಕರು ಅದೇ ಶಾಲೆಗಳಲ್ಲಿ ಎಷ್ಟು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಗಮನಿಸಿ ಉತ್ತಮವಾಗಿ ಕಾರ್ಯನಿರ್ವಹಿಸದೇ ಇರುವವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಸಿಇಓ ಭುವನೇಶ ಪಾಟೀಲ ಅವರು ನಿರ್ದೇಶಿಸಿದರು.
ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಚೆನ್ನಾಗಿದ್ದು, ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇದ್ದು, ಫಲಿತಾಂಶ ಚೆನ್ನಾಗಿ ಬರದೆ ಇರುವ ಶಾಲೆಗಳನ್ನು ಗುರುತಿಸಿ ಸರ್ಕಾರಕ್ಕೆ ಅನುದಾನ ಹಿಂಪಡೆಯಲು ಪ್ರಸ್ತಾವನೆ ಸಲ್ಲಿಸಲಾಗುವುದು. 2024-25 ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೇ.70, ಅನುದಾನರಹಿತ ಶಾಲೆಗಳಲ್ಲಿ ಶೇ.60 ಫಲಿತಾಂಶ ಬಂದಿದೆ. ಅನುದಾನಿತ ಶಾಲೆಗಳಲ್ಲಿ ಕಡಿಮೆ ಫಲಿತಾಂಶ ಬಂದಿರುವುದು ಕಂಡು ಬಂದಿದೆ. ಹಂತಹಂತವಾಗಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಿಸಲು ಕ್ರಮವಹಿಸಬೇಕು. 3 ನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಫಲಿತಾಂಶ ಸಾಧಿಸಬೇಕೆಂದು ಇಲಾಖೆಗೆ ಅವರು ಸೂಚಿಸಿದರು.
ವೇದಿಕೆಯಲ್ಲಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕ್ಷೇತ್ರಶಿಕ್ಷಣಾಧಿಕಾರಿಗಳು, ಡಯಟ್ ಉಪಪ್ರಾಚಾರ್ಯರು ಹಾಗೂ ಹಿರಿಯ ಉಪನ್ಯಾಸಕರು, ಆರ್.ಎಂ.ಎಸ್.ಎ ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಉಪನಿರ್ದೇಶಕರ ಕಚೇರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪೂರ್ವಸಿದ್ಧತಾ ಪರೀಕ್ಷೆ-2 ರಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಸಾಧಿಸಿದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಭಾಗವಹಿಸಿದ್ದರು.








