ಬೆಂಗಳೂರು: ನಷ್ಟದ ಕಾರಣದಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ (UDAN) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಒಟ್ಟಾರೆ ಪ್ರಗತಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಸಂಬಂಧವಾಗಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಅಧಿಕೃತ ಪತ್ರ ಬರೆದು ವಿಶೇಷ ಆಗ್ರಹ ಮಾಡಿದ್ದಾರೆ.
ಪ್ರಾದೇಶಿಕ ಪ್ರಗತಿಗೆ ಹಿನ್ನಡೆ: ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಲೋಕಾರ್ಪಣೆಗೊಂಡು ಕಾರ್ಯಾರಂಭ ಮಾಡಿತ್ತು. ಇದಾದ ನಂತರ ಇಂಡಿಗೋ ವಿಮಾನಯಾನ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ಯಶಸ್ವಿಯಾಗಿ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಆರ್ಥಿಕ ನಷ್ಟದ ಕಾರಣವನ್ನು ನೀಡಿ ಕಳೆದ ಕೆಲವು ತಿಂಗಳುಗಳಿಂದ ಈ ಸೇವೆಯನ್ನು ಹಠಾತ್ತನೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಸಚಿವರು ಪತ್ರದಲ್ಲಿ ವಿವರಿಸಿದ್ದಾರೆ. ಅಲ್ಲದೆ, ಈ ಭಾಗದ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಬೆಳವಣಿಗೆಗೆ ಇದು ದೊಡ್ಡ ಮಟ್ಟದ ಹಿನ್ನಡೆ ತಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಮಧ್ಯಸ್ಥಿಕೆಗೆ ಮನವಿ: “ಶಿವಮೊಗ್ಗದಿಂದ ರಾಜಧಾನಿ ಬೆಂಗಳೂರಿಗೆ ನೇರ ವಿಮಾನ ಸಂಪರ್ಕ ಇಲ್ಲದೇ ಇರುವುದರಿಂದ ಮಲೆನಾಡು ಭಾಗದಿಂದ ದೇಶದ ಇತರೆ ಮಹಾನಗರಗಳಿಗೆ ಹಾಗೂ ವಿದೇಶಗಳಿಗೆ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಭಾರಿ ಸಮಸ್ಯೆಯಾಗುತ್ತಿದೆ. ಆದ್ದರಿಂದ, ವಿಜಿಟಿ ಫಂಡ್ (Viability Gap Funding – VGF) ನೆರವಿನ ಮೂಲಕ ಮುಂಬರುವ ಉಡಾನ್ ಯೋಜನೆಯ ಬಿಡ್ಡಿಂಗ್ನಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗವನ್ನು ಸೇರ್ಪಡೆ ಮಾಡಲು ಕೇಂದ್ರ ಸಚಿವರು ತಕ್ಷಣ ಮಧ್ಯಪ್ರವೇಶಿಸಬೇಕು” ಎಂದು ಎಂ.ಬಿ. ಪಾಟೀಲ ಕೋರಿದ್ದಾರೆ.
ನೈಟ್ ಲ್ಯಾಂಡಿಂಗ್ ಕಾಮಗಾರಿ ಪ್ರಗತಿಯಲ್ಲಿ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯೂ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ‘ನೈಟ್ ಲ್ಯಾಂಡಿಂಗ್’ (Night Landing) ಸೌಲಭ್ಯ ಒದಗಿಸುವ ಕಾಮಗಾರಿ ಪ್ರಸ್ತುತ ಭರದಿಂದ ಸಾಗುತ್ತಿದೆ. ಇದನ್ನು ಹೊರತುಪಡಿಸಿ ವಿಮಾನ ನಿಲ್ದಾಣಕ್ಕೆ ಬೇಕಾದ ಉಳಿದೆಲ್ಲ ಅತ್ಯಾಧುನಿಕ ಮೂಲಸೌಕರ್ಯಗಳು ಈಗಾಗಲೇ ಲಭ್ಯ ಇವೆ. ಆದ್ದರಿಂದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪತ್ರದಲ್ಲಿ ವಿನಂತಿಸಲಾಗಿದೆ.








