ಬೆಂಗಳೂರು: ನಗರದಲ್ಲಿನ ಸರ್ಕಾರಿ ಜಮೀನಿಗೆ ನಿಯಮಬಾಹಿರವಾಗಿ ಆದೇಶ ಹೊರಡಿಸಿದ ಆರೋಪದಡಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಪ್ರಶಾಂತ್ ಖಾನಗೌಡ ಪಾಟೀಲ್ ಅವರು ಹಲಸೂರು ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು. ಆದರೇ 48ನೇ ಎಸಿಎಂಎಂ ನ್ಯಾಯಾಲಯದ ಎದುರು ದೂರುದಾರರು ಹಾಜರಾಗಿ ಎನ್ಸಿಆರ್ ಪ್ರಕರಣದ ತನಿಖೆಗೆ ಮನವಿ ಮಾಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 257ರ ಅಡಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಮಂಗಳವಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅಂದಹಾಗೇ ಹಿಂದಿನ ವಿಶೇಷ ಜಿಲ್ಲಾಧಿಕಾರಿ–3 ವಾಸಂತಿ ಅಮರ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂಬರ್ 8ರಲ್ಲಿ 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ನಿಯಮ ಬಾಹಿರ ಆದೇಶ ಹೊರಡಿಸಿದ್ದಾರೆ’ ಎಂಬ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.
ವಾಸಂತಿ ಅಮರ್ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಸೆಕ್ಷನ್ 35 ಹಾಗೂ ಭಾರತೀಯ ನ್ಯಾಯ ಸಂಹಿತೆ 257ರ ಅಡಿ ಎಫ್ಐಆರ್ ದಾಖಲಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಅವರ ಸೂಚನೆ ಮೇರೆಗೆ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ಅಂದಹಾಗೇ 100 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನೇ ಮಾರಾಟ ಮಾಡಿದಂತ ಆರೋಪ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಕೇಳಿ ಬಂದಿದೆ. ಬೆಂಗಳೂರಿನ ವಿಶೇಷ ಜಿಲ್ಲಾಧಿಕಾರಿ ಆಗಿದ್ದಂತ ವೇಳೆಯಲ್ಲಿ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದು ಕಂದಾಯ ಇಲಾಖೆಯಲ್ಲಿನ ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಸಾಬೀತು ಕೂಡ ಆಗಿದೆ. ಅಕ್ರಮ ಸಾಬೀತಾದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.