ರಾಮನಗರ : ಕಳೆದ ಕೆಲವು ತಿಂಗಳುಗಳ ಹಿಂದೆ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ಭಾರಿ ಸದ್ದು ಮಾಡಿದ್ದವು. ಇದೀಗ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಶಿಕ್ಷಕರ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ.
ಹೌದು ಕನಕಪುರ ತಾಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ.ಕೊಳವೆ ಆಕಾರದ ಸಿಮೆಂಟ್ ಟ್ಯಾಂಕ್ಗೆ ಏಣಿ ಸಹಾಯದಿಂದ ಮಕ್ಕಳನ್ನು ಒಳಗಡೆ ಇಳಿಸಿ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕರು ಸೂಚಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಶಾಲೆಗೆ ಧಾವಿಸಿದ ಪೋಷಕರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಶಾಲೆಯ ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರು ತಮ್ಮ ಜತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿರುವುದು ಗೊತ್ತಿಲ್ಲ ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ಅವರು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.ಇದರಿಂದ ಸಮಾಧಾನಗೊಳ್ಳದ ಪೋಷಕರು, ಮುಖ್ಯ ಶಿಕ್ಷಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಇಒ ಅವರಿಗೆ ಕರೆ ಮಾಡಿ ಒತ್ತಾಯಿಸಿದರು.
ಹತ್ತು ಅಡಿ ಎತ್ತರದ ನೀರಿನ ತೊಟ್ಟಿಗೆ ಮಕ್ಕಳನ್ನು ಇಳಿಸಿ ಕೆಲಸ ಮಾಡಿಸಿದ್ದಾರೆ. ಒಂದು ವೇಳೆ ಏನಾದರೂ ಅನಾಹುತ ಆಗಿದ್ದರೆ ಅದಕ್ಕೆ ಯಾರು ಜವಾಬ್ದಾರರು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ರಾಮಪ್ಪ ಅವರು ಘಟನೆ ಕುರಿತಂತೆ ಪ್ರತಿಕ್ರಿಯಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳ ಮಹಜರು ಮಾಡಲಿದ್ದಾರೆ. ಶಿಕ್ಷಕರು ಮತ್ತು ಪೋಷಕರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.