ಬೆಂಗಳೂರು: “ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
“ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು.
ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು.
ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ತಿಳಿದಿಲ್ಲ. ಇದಕ್ಕೆ ಸಂಬಂಧಪಟ್ಟ ಸಚಿವರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ” ಎಂದರು.
ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್








