ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ನಾಳೆ ಬೆಂಗಳೂರಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಇದರ ನಡುವೆ ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದೆ.
ಪತ್ರಿಕಾ ಪ್ರಕಟಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತಿಳಿಸಿದ್ದು, ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿದೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಇರುವುದಿಲ್ಲ.