ಬೆಂಗಳೂರು : 384 ಗೆಜೆಟೆಡ್ ಪ್ರೊಬೆಷನರ್ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) 2024ರ ಫೆ.26ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (KAT) ರದ್ದುಪಡಿಸಿ ಮಹತ್ವದ ಆದೇಶ ನೀಡಿದೆ.
ರಾಜ್ಯ ಸರ್ಕಾರ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣವನ್ನು ಶೇಕಡ 50ರಿಂದ ಶೇ.56ಕ್ಕೆ ಹೆಚ್ಚಿಸಿರುವುದನ್ನು ಆಧರಿಸಿ 384 ಗೆಜೆಟೆಡ್ ಪ್ರೊಬೆಷನರ್ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಕೆಎಟಿ ರದ್ದುಪಡಿಸಿದೆ.
ಕೆಎಎಸ್ ಹುದ್ದೆಗಳ ಭರ್ತಿಗೆ ಸರ್ಕಾರ ಮೀಸಲು ಹೆಚ್ಚಳ ಮಾಡಿ 2022ರ ಡಿ.12ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನೂ ರದ್ದುಪಡಿಸಿರುವ ಕೆಎಟಿ, ಕಾನೂನು ಪ್ರಕಾರ ನೇಮಕಕ್ಕೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಕೆಪಿಎಸ್ಸಿ ಸ್ವತಂತ್ರವಿದೆ ಎಂದು ಸ್ಪಷ್ಟಪಡಿಸಿದೆ. ಕೆಪಿಎಸ್ಸಿ ಅಧಿಸೂಚನೆ ಪ್ರಶ್ನಿಸಿ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ.ಎನ್.ಮಧು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಕೆಎಟಿ ಅಧ್ಯಕ್ಷ ನ್ಯಾ.ಆರ್ .ಬಿ.ಬೂದಿಹಾಳ್ ಹಾಗೂ ಆಡಳಿತ ಸದಸ್ಯ ರಾಘವೇಂದ್ರ ಔರಾಡ್ಕರ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.