ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಮಾಜಿ ಕೇಂದ್ರ ಸಚಿವ ಹಾಗೂ ಉತ್ತರ ಕನ್ನಡದ ಪ್ರಭಾವಿ ನಾಯಕ ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕ ಜೀವನ ಹಾಗೂ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ‘ಹಿಂದೂ ಫೈರ್ ಬ್ರ್ಯಾಂಡ್’ ಖ್ಯಾತಿಯ ಹೆಗಡೆ, ಇದೀಗ ಭಟ್ಕಳದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಮೂಲಕ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಭಟ್ಕಳದಲ್ಲಿ ‘ಹಿಂದೂ ಸಂಗಮ’ದ ರಣಕಹಳೆ
ಬರುವ ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಆಯೋಜಿಸಲಾಗಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸುತ್ತಿದ್ದಾರೆ. ತಮ್ಮ ರಾಜಕೀಯ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ಭಟ್ಕಳದಿಂದಲೇ ಅವರು ಮತ್ತೆ ಸಂಘಟನಾ ಚಟುವಟಿಕೆಗೆ ಚಾಲನೆ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂಘ ಪರಿವಾರದ ನಾಯಕರ ಮನವೊಲಿಕೆ
ಮೂಲಗಳ ಪ್ರಕಾರ, ಹೆಗಡೆಯವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ಕರೆತರುವ ನಿಟ್ಟಿನಲ್ಲಿ ಸಂಘ ಪರಿವಾರದ ಹಿರಿಯ ನಾಯಕರು ನಿರಂತರ ಪ್ರಯತ್ನ ನಡೆಸಿದ್ದರು. ಹಲವು ಸುತ್ತಿನ ಮಾತುಕತೆಗಳ ನಂತರ, ಸಂಘದ ನಾಯಕರ ಮನವಿಗೆ ಸ್ಪಂದಿಸಿರುವ ಹೆಗಡೆ, ಸಾರ್ವಜನಿಕ ವೇದಿಕೆಗೆ ಮರಳಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಭಟ್ಕಳದಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ
ಹೆಗಡೆಯವರ ಪುನರಾಗಮನವನ್ನು ಸ್ಮರಣೀಯವಾಗಿಸಲು ಭಟ್ಕಳದಲ್ಲಿ ಅದ್ದೂರಿ ಸಿದ್ಧತೆಗಳು ನಡೆಯುತ್ತಿವೆ. ನಗರದ ಪ್ರವೇಶ ದ್ವಾರದಿಂದ ಕಾರ್ಯಕ್ರಮದ ವೇದಿಕೆಯವರೆಗೆ ಬೃಹತ್ ರೋಡ್ ಶೋ ನಡೆಸಲು ಯೋಜನೆ ರೂಪಿಸಲಾಗಿದೆ.ನೂರಕ್ಕೂ ಹೆಚ್ಚು ಕಾರುಗಳ ರ್ಯಾಲಿಯ ಮೂಲಕ ಅವರನ್ನು ಸ್ವಾಗತಿಸಲು ಅಭಿಮಾನಿಗಳು ಮತ್ತು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಗಡೆಯವರ ರಿ-ಎಂಟ್ರಿ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ಈ ಕಾರ್ಯಕ್ರಮ ಈಗ ಅಧಿಕೃತ ಮುದ್ರೆ ಒತ್ತಿದಂತಾಗಿದೆ.








