ಬೆಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಈ ವಿಚಾರವಾಗಿ ಪ್ರತಿಕ್ರಿಸಿದ ಅವರು, ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು ಎಂದರು.
ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದೂ ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು ತಮಗೆ ಬೇಕಾದ್ದನ್ನು ಅನುಸರಿಸುತ್ತಾರೆ ಎಂದರು.