ಮೈಸೂರು : ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಅಲ್ಲದೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಸಿಎಂ ಆಗಲಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಚ್ ವಿಶ್ವನಾಥ್ ಅವರ ಈ ಒಂದು ಹೇಳಿಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಸುಮಾರು ಒಂದೂವರೆ ಲಕ್ಷ ಶಿಕ್ಷಕರು ಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕಾಗಿ 170 ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿತ್ತು. ಅಂದಿನಿಂದ ಜಾತಿವಾರು ಜನಗಣತಿ ವರದಿಯನ್ನು ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ, ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ಸ್ವೀಕರಿಸಲಿಲ್ಲ ಎಂದು ಆರೋಪ ಹೊರಿಸುತ್ತಲೇ ಬಂದಿದ್ದರು.
ಆದರೆ ಇದೀಗ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಲಾಗುವುದು ಎಂದು ಹೇಳಿಕೆ ಕೊಟ್ಟಿದ್ದಾರೆ. 90 ದಿನಗಳೊಳಗೆ ಇದನ್ನು ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇದು ಹೇಗೆ ಸಾಧ್ಯ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.