ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.
ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಮಾಡಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು.
ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ. ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಆಚರಿಸಬೇಕು ಎಂಬ ಸೂಚನೆಯನ್ನು ಇದೇ ವೇಳೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.