ಬೆಂಗಳೂರು :ತಂದೆಯ ಮೃತದೇಹವನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮಕ್ಕಳು ತಮ್ಮ ದ್ವಿಚಕ್ರ ವಾಹನದಲ್ಲಿ ಸಾಗಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ಸದರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು, ವೈದ್ಯರು ಈ ಬಗ್ಗೆ ವರದಿ ನೀಡಿದ್ದಾರೆ. ರೋಗಿಯ ಸಂಬಂಧಿಕರು ಮೃತ ದೇಹವನ್ನು ಸಾಗಿಸಲು ತುರ್ತು ವಾಹನದ ವ್ಯವಸ್ಥೆ ಮಾಡಲು ಕೋರಿದ್ದರು. ಆಂಬುಲೆನ್ಸ್ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಸಾಗಿಸಲು ಮಾತ್ರ ಸರ್ಕಾರದ ಆದೇಶವಾಗಿದ್ದು, ಮೃತಪಟ್ಟ ವ್ಯಕ್ತಿಯನ್ನು ಸಾಗಿಸಲು ಅನುಮತಿ ಇರುವುದಿಲ್ಲ. ಹಾಗಾಗಿ ಪಾವಗಡ ತಾಲೂಕಿನಿಂದ ವಾಹನದ ವ್ಯವಸ್ಥೆ ಮಾಡಲಾಗಿತ್ತು. ಅಷ್ಟರಾಗಲೇ ವೈದ್ಯಾಧಿಕಾರಿಗಳ ಗಮನಕ್ಕೆ ಬಾರದೇ ಮೃತ ದೇಹವನ್ನು ಸ್ವ ಇಚ್ಛೆಯಿಂದ ಅವರ ಕುಟುಂಬಸ್ಥರು ತೆಗೆದುಕೊಂಡು ಹೋಗಿರುತ್ತಾರೆ ಎಂದು ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.