ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮಕ್ಕಲಿಗೂ ಕೃತಕ ಬುದ್ಧಿಮತ್ತೆ(ಎಐ) ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಮಾಡಿಕೊಡುವಂತಹ ನೂತನ ಕಲಿಕಾ ವ್ಯವಸ್ಥೆಯನ್ನು ರೂಪಿಸಲು ಚಿಂತನೆ ನಡೆದಿದೆ. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ಸವಲತ್ತು ಒದಗಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.