ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.
ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು. ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಪರೀಕ್ಷೆಗಳನ್ನು ನಿಯಮಾನಸಾರ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನುತ್ತೀರ್ಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.
ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.
ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು ಎಂದರು.
ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.
ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು. ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿನ ರೈತರು ತಮ್ಮ ಗ್ರಹ ಚಟುವಟಿಕೆಗಳಿಗಾಗಿ ಕೆರೆಗಳಿಂದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಲ್ಲಿ ಕಂದಾಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಹಾಗೂ ಯಾವುದೇರಾಯಧನ ಭರಿಸದೆ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಲ್ಲಿ ನಿಯಮಾನುಸಾರ ಕಠಿಣ ಕಾನೂನು ಕ್ರಮಗಳನ್ನು ಅನುಸರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಸಚಿವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.