ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚನೆ ಮಾಡಿರುವ ಸಮಿತಿ ಸದಸ್ಯರಿಗೆ ಸಂಪುಟ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಮಿತಿಗಳ ಮುಖ್ಯಸ್ಥರಿಗೆ ಸಚಿವ ಸಂಪುಟ ಸ್ನಾನಮಾನ ಪ್ರಶ್ನಿಸಿ ಪಿಐಎಲ್ ಸಲ್ಲಿಸಲಾಗಿದೆ. ಪಿ.ರಾಜೀವ್ ಸಲ್ಲಿಸಿದ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಸಂವಿಧಾನ ಆರ್ಟಿಕಲ್ 164 (1A) ಉಲ್ಲಂಘಿಸಿ ನೇಮಕ ಮಾಡಲಾಗಿದೆ. ಯಾವುದೇ ಶೈಕ್ಷಣಿಕ ತಾಂತ್ರಿಕ ಅರ್ಹತೆ ಪರಿಗಣಿಸದೆ ನೇಮಕದ ಆರೋಪ ಕೇಳಿ ಬಂದಿದೆ ಎಂದು ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ಬಳಿಕ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠವು, ಆರೋಪ ಸತ್ಯವಾದರೆ ಸರ್ಕಾರದ ಕ್ರಮ ಸ್ವಾಗತಾ ರ್ಹವಲ್ಲ ಎಂದು ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಮತ್ತು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಸಮಿತಿಯ ಸದಸ್ಯರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳನ್ನು ನೇಮಕ ಮಾಡಬಹುದಿತ್ತು. ಅದಕ್ಕೆ ಬದಲಾಗಿ ರಾಜ್ಯದಲ್ಲಿ ಅಡಳಿತ ಚಿಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ರಾಜ್ಯ, ಜಿಲ್ಲಾ ಮಟ್ಟದಲ್ಲಿ ನೇಮಕ ಮಾಡಲಾಗಿದೆ. ಅವರಿಗೆ ಯಾವುದೇ ಶೈಕ್ಷಣಿಕ ಅರ್ಹತೆಗಳು ಇಲ್ಲ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾರ್ಚ್ 27ಕ್ಕೆ ಮುಂದೂಡಿತು.
ಅರ್ಜಿಯಲ್ಲಿನ ಆರೋಪವೇನು?
ರಾಜ್ಯ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಎಂಬ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದರಂತೆ ಈ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಿದ್ದು, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಹೆಚ್. ಎಂ. ರೇವಣ್ಣ, ಡಾ. ಪುಷ್ಪಾ ಅಮರನಾಥ್, ಎಸ್.ಆರ್. ಪಾಟೀಲ್ – ಬ್ಯಾಡಗಿ, ಮೆಹರಾಜ್ ಖಾನ್ ಮತ್ತು ಸೂರಜ್ ಹೆಗಡೆ ಅವರು ಸಮಿತಿ ಸದಸ್ಯರಾಗಿದ್ದಾರೆ. ಇವರಿಗೆ ಯಾವುದೇ ಶೈಕ್ಷಣಿಕ ಮತ್ತು ತಾಂತ್ರಿಕ ಅರ್ಹತೆಗಳನ್ನು ಪರಿಗಣಿಸದೆ, ಅಧಿಕಾರಕ್ಕಾಗಿ ಹುದ್ದೆಗಳನ್ನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.