ಬೆಂಗಳೂರು: ಸರ್ಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಂತಹ ಅಭ್ಯರ್ಥಿ ಕೆನೆ ಪದರಕ್ಕೆ ಸೇರಲಿದ್ದು, ಮೀಸಲಾತಿ ಪಡೆಯಲು ಅನರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಧಾರವಾಡದ ರಾಘವೇಂದ್ರ ಚಂದ್ರಣ್ಣನವರ್ ಪ್ರವರ್ಗ 2ಎ ಅಡಿ ಆಯ್ಕೆಯಾಗಿದ್ದರು. ಅದರಂತೆ ಮೀಸಲಾತಿ ಪತ್ರಕ್ಕಾಗಿ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಯ ಪೋಷಕರ ಆದಾಯವು ಪ್ರವರ್ಗ 2ಎ ಗೆ ನಿಗದಿಪಡಿಸಿದ ವಾರ್ಷಿಕ ಆದಾಯ ಮಿತಿ 8 ಲಕ್ಷ ಮೀರಿದ ಕಾರಣ ಹಿಂದುಳಿದ ವರ್ಗದಡಿ ಮೀಸಲಾತಿ ಪಡೆಯಲು ಅರ್ಹರಲ್ಲ ಎಂದು ಸಮಿತಿ ಆದೇಶಿಸಿತ್ತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಾತಿ, ಆದಾಯ ಪರಿಶೀಲನಾ ಮೇಲ್ಮನವಿ ಪ್ರಾಧಿಕಾರ, ಧಾರವಾಡ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷರು ಸಲ್ಲಿಸಿದ್ದ ರಿಟ್ ಮೇಲ್ಮನವಿ, ನ್ಯಾಯಾಂಗ ನಿಂದನಾ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗಿಯ ಪೀಠ ಮಹತ್ವದ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯ ಪೀಠ 2024ರ ಅಕ್ಟೋಬರ್ ನಲ್ಲಿ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹ ಎಂದು ತೀರ್ಪು ನೀಡಿತ್ತು.
ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಸರ್ಕಾರ ವಿಭಾಗೀಯ ನ್ಯಾಯಪೀಠದಲ್ಲಿ ಪ್ರಶ್ನಿಸಿತ್ತು. ಸರ್ಕಾರದ ಪರ ವಾದ ಮಂಡಿಸಿದ ನಮಿತಾ ಮಹೇಶ್ ಅವರ ವಾದವನ್ನು ನ್ಯಾಯಪೀಠ ಮನ್ನಿಸಿದೆ. ಅಭ್ಯರ್ಥಿಯ ಪೋಷಕರ ವೇತನವೂ ಸೇರಿದಂತೆ ಎಲ್ಲಾ ಮೂಲಗಳ ಆದಾಯವನ್ನು ಪರಿಗಣಿಸಬೇಕು. ಒಂದು ವೇಳೆ ಆದಾಯ ನಿಗದಿತ ಮಿತಿ ದಾಟಿದಲ್ಲಿ ಆದಾಯ ತೆರಿಗೆ ಪಾವತಿದಾರ ಆಗಿದ್ದರೆ ಆತನಿಗೆ ಕೆನೆ ಪದರ ನಿಯಮ ಅನ್ವಯವಾಗುತ್ತದೆ. ಅಭ್ಯರ್ಥಿ ಮೀಸಲಾತಿ ಕ್ಷೇಮು ಮಾಡಲು ಅವಕಾಶವಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದಲ್ಲಿ ಅಭ್ಯರ್ಥಿ ರಾಘವೇಂದ್ರ ಚಂದಣ್ಣನವರ್ ಅವರ ಪೋಷಕರ ವಾರ್ಷಿಕ ಆದಾಯವು ಹಿಂದುಳಿದ ವರ್ಗಗಳ 2ಎ ಪ್ರವರ್ಗದವರಿಗೆ ನಿಗದಿಪಡಿಸಿರುವ 8 ಲಕ್ಷಕ್ಕಿಂತ ಹೆಚ್ಚಿದೆ. ಮೇಲಾಗಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅದರಂತೆ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಕ್ಷೇಮು ಮಾಡಲಾಗದು ಎಂದು ಹೈಕೋರ್ಟ್ ತಿಳಿಸಿದೆ.








