ಬೆಂಗಳೂರು : ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರನ್ನು ಇದೀಗ ಹೈದರಾಬಾದ್ನ ಚಂಚಲಗುಡ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿರುವ ಕಾರಣ ಪೊಲೀಸರು ಬಾಡಿ ವಾರೆಂಟ್ ಮೂಲಕ ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯದ ಅನುಮತಿ ಮೇರೆಗೆ ಕರೆತರಲಾಗಿದೆ. ರಾಜ್ಯಕ್ಕೆ ಕರೆತಂದ ಬಳಿಕ ಪೊಲೀಸರು ಕಾನೂನಿನ ಪ್ರಕಾರ ಜನಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪರಪ್ಪನ ಆಗ್ರಹಾರ ಜೈಲಿಗೆ ಕಳಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಜೂ.4, 5 ಮತ್ತು 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಕರೆತರಲಾಗಿದ್ದು, ವಿಚಾರಣೆ ಬಳಿಕ ಪುನಃ ಹೈದರಾಬಾದ್ ಜೈಲಿಗೆ ಕಳುಹಿಸಿಕೊಡಲಾಗುತ್ತದೆ. ಶಾಸಕರಾಗಿದ್ದ ವೇಳೆ ಜನಾರ್ದನರೆಡ್ಡಿ ವಿಚಾರಣೆಗೆ ಹಾಜರಾಗುತ್ತಿದ್ದರು.
ಇದೀಗ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದಾರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ ಅಪರಾಧಿ ಎಂದು ಹೇಳಿ ಶಿಕ್ಷೆಗೊಳಪಡಿಸಿರುವ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ. ಬಂಧನದಲ್ಲಿರುವ ಕಾರಣ ಬಾಡಿ ವಾರೆಂಟ್ ಮೂಲಕ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದೆ. ಹೀಗಾಗಿ ಬಾಡಿ ವಾರೆಂಟ್ ಮೂಲಕ ಕರೆತರಲಾಗಿದೆ.