ಬೆಂಗಳೂರು : ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಡೆಯಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆಗಾಗಿ ನೀರು ಮಾರಾಟ ಮಾಡುವ ಕಂಪನಿಗಳಿಗೆ ಖಾಲಿ ಬಾಟಲಿಗಳನ್ನು ಹಿಂಪಡೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡುವಂತೆ ಈ ನಿಯಮವನ್ನು ರೂಪಿಸಲಾಗುತ್ತದೆ. ಉತ್ಪಾದಕರ ವಿಸ್ತರಿತ ಜವಾಬ್ದಾರಿ (EPR) ಅಡಿಯಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳಿಂದ ಪರಿಸರಕ್ಕೆ ಆಗುವ ಪರಿಣಾಮಗಳನ್ನು ನಿರ್ವಹಿಸಬೇಕಾಗಿದೆ. ಈ ಕ್ರಮದಿಂದ ರಸ್ತೆ, ನದಿ, ಕೆರೆ, ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಡೆಯಲು ಸಾಧ್ಯವಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು. ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿ (ಮಿನರಲ್ ವಾಟರ್ ಬಾಟಲ್ಸ್)ಗೆ ಕಡಿವಾಣ ಹಾಕಬೇಕಾಗಿದೆ. ಕುಡಿಯುವ ನೀರನ್ನು ಬಾಟಲಿಗಳ ಮೂಲಕ ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ.
ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಈ ಮೂಲಕ ಸೂಚಿಸಿದ್ದಾರೆ.
ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಡೆಯಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದೇನೆ.
ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆಗಾಗಿ ನೀರು ಮಾರಾಟ ಮಾಡುವ ಕಂಪನಿಗಳಿಗೆ ಖಾಲಿ ಬಾಟಲಿಗಳನ್ನು ಹಿಂಪಡೆದು… pic.twitter.com/xFyvMzfo8k
— Eshwar Khandre (@eshwar_khandre) March 22, 2025