ಬೆಂಗಳೂರು: ಕ್ರಿಮಿನಲ್ ಪ್ರಕರಣದಲ್ಲಿ ಖುಲಾಸೆಯಾದ (ದೋಷಮುಕ್ತರಾದ) ತಕ್ಷಣಕ್ಕೆ ಅರ್ಜಿದಾರರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯುವ ಹಕ್ಕು ಸಿಗುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ಮಹತ್ವದ ತೀರ್ಪು ನೀಡಿದೆ.
ಮೈಸೂರು ಜಿಲ್ಲೆಯ ಹುಣಸೂರು ಮೂಲದ 42 ವರ್ಷದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಮತ್ತು ಡಾ. ಕೆ. ಮನ್ಮಥ ರಾವ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಈ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ:
ಅರ್ಜಿದಾರರ ತಂದೆ ಎಎಸ್ಐ (ASI) ಆಗಿ ಕಾರ್ಯನಿರ್ವಹಿಸುತ್ತಿದ್ದಾಗ ನಿಧನರಾಗಿದ್ದರು. ಅವರ ನಿಧನದ ನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗ ಕೋರಿ ಅರ್ಜಿದಾರರು 2018ರ ಆಗಸ್ಟ್ ನಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಮೇಲೆ ಕ್ರಿಮಿನಲ್ ಪ್ರಕರಣ ಬಾಕಿ ಇದ್ದ ಕಾರಣ ಪೊಲೀಸ್ ಇಲಾಖೆಯು ಅವರ ಮನವಿಯನ್ನು ತಿರಸ್ಕರಿಸಿತ್ತು.
ಆನಂತರ ಪ್ರಕರಣದ ವಿಚಾರಣೆ ನಡೆದು ಅರ್ಜಿದಾರರು ಕೋರ್ಟ್ ನಿಂದ ಖುಲಾಸೆಗೊಂಡಿದ್ದರು. ಈ ಆಧಾರದ ಮೇಲೆ ಅವರು ಎರಡನೇ ಬಾರಿಗೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಪೊಲೀಸ್ ಇಲಾಖೆಯು ಈ ಅರ್ಜಿಯನ್ನೂ ಸಹ 2022ರ ಸೆಪ್ಟೆಂಬರ್ 13ರಂದು ತಿರಸ್ಕರಿಸಿತ್ತು. ಇಲಾಖೆಯ ಈ ಆದೇಶದ ವಿರುದ್ಧ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪೊಲೀಸ್ ಇಲಾಖೆಯಂತಹ ಶಿಸ್ತಿನ ವಿಭಾಗಗಳಲ್ಲಿ ನೇಮಕಾತಿಗೆ ಕೇವಲ ನ್ಯಾಯಾಲಯದ ಖುಲಾಸೆಯೊಂದೇ ಅರ್ಹತೆಯಾಗಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.ಅಭ್ಯರ್ಥಿಯ ಹಿನ್ನೆಲೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ಪೊಲೀಸ್ ಇಲಾಖೆಗೆ ಇರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಪೊಲೀಸ್ ಇಲಾಖೆ ಮತ್ತು ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯ ಆದೇಶದಲ್ಲಿ ಯಾವುದೇ ದೋಷವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.








