ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಐವರನ್ನು ವಶಕ್ಕೆ ಪಡೆದುಕೊಂಡಿದೆ.
ಇನ್ನು ಈ ವಿಚಾರವಾಗಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, 5 ಹುಲಿಗಳ ಸಾವು ಅತ್ಯಂತ ದುಃಖಕರ ಘಟನೆಯಾಗಿದೆ. ಹುಲಿಗಳ ಸಾವಿನ ಬಗ್ಗೆ ತನಿಖೆ ಈಗಾಗಲೇ ತಂಡ ರಚಿಸಿದ್ದೇವೆ. ಇನ್ನು ಮೂರು ದಿನಗಳಲ್ಲಿ ವರದಿ ಬರಲಿದೆ ಪ್ರಾಥಮಿಕ ಹಂತದಲ್ಲಿ ಗೊತ್ತಾಗಿರುವಂತೆ ವಿಷಪ್ರಾಶನ ಆಗಿರಬಹುದು. ಸತ್ತುಹೋದ ಹಸಿವಿನ ಮೇಲೆ ಯಾರೋ ವಿಷ ಹಾಕಿರಬಹುದು ಅದನ್ನು ಹುಲಿಗಳು ತಿಂದು ಮೃತಪಟ್ಟಿರಬಹುದು.
ಹುಲಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು ಹುಲಿ ಸಂರಕ್ಷಣೆಗೆ ಕೇಂದ್ರ ಸಹ ಅನುದಾನ ಬಿಡುಗಡೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಾನು ಚರ್ಚೆ ಮಾಡಿದ್ದೇನೆ ಎಂದು ಅರಣ್ಯ ಇಲಾಖೆಯ ಸಚಿವ ಸಚಿವ ಈಶ್ವರ ಖಂಡ್ರೆ ತಿಳಿಸಿದರು.